ಮಂಡ್ಯ : ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ರಾಜ್ಯದ ಪರವಾಗಿ ಸಮರ್ಥ ವಾದ ಮಂಡಿಸುವಲ್ಲಿ ಆಗುತ್ತಿರುವ ಲೋಪವೇ ಪ್ರತಿ ಬಾರಿ ರಾಜ್ಯಕ್ಕೆ ಹಿನ್ನಡೆಯಾಗಲು ಕಾರಣ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಬಾರಿಯೂ ರಾಜ್ಯದ ವಿರುದ್ಧವಾಗಿಯೇ ತೀರ್ಪುಗಳು ಬರುತ್ತಿವೆ. ನಮ್ಮ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ನೀರಿನ ವಾಸ್ತವ ಚಿತ್ರಣವನ್ನು ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರದ ಮುಂದಿಡುತ್ತಿಲ್ಲ ಎಂದು ಆರೋಪಿಸಿದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಡೆಸಿದ ಸಭೆಯಲ್ಲಿ ತಮಿಳುನಾಡಿನ ಎಲ್ಲ ಅಧಿಕಾರಿಗಳು ಭಾಗಿಯಾಗಿದ್ದರು. ಆದರೆ ನಮ್ಮ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದಾರೆ. ಇದರಿಂದ ಏನು ಎಫೆಕ್ಟ್ ಬರಲಿದೆ. ನಮ್ಮಲ್ಲಿರುವ ನೀರಿನ ಪರಿಸ್ಥಿತಿಯನ್ನು ದಾಖಲೆಗಳ ಸಹಿತ ಪ್ರಾಧಿಕಾರದ ಮುಂದಿಡಬೇಕಿದ್ದು ಅಧಿಕಾರಿಗಳ ಜವಾಬ್ದಾರಿಯಲ್ಲವೇ. ಗಂಭೀರ ವಿಷಯವನ್ನು ಉಡಾಫೆಯಾಗಿ ತೆಗೆದುಕೊಂಡಿದ್ದಾರೆ. ಇದನ್ನ ಖಂಡಿಸುತ್ತೇನೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.