ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಗಲು ದೊಡ್ಡ ಮಟ್ಟದ ಕಾನೂನು ಹೋರಾಟ ನಡೆಸುವ ಅಗತ್ಯವಿದೆ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಗರದ ಸರ್ ಎಂ.ವಿ.ಪ್ರತಿಮೆ ಬಳಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಾಧಿಕಾರ ಯಾವ ಮಾನದಂಡ ಆಧರಿಸಿ ನೀರು ಬಿಡುಗಡೆಗೆ ಆದೇಶ ಮಾಡುತ್ತಿದೆಯೋ ಗೊತ್ತಾಗುತ್ತಿಲ್ಲ. ಪ್ರಾಧಿಕಾರಕ್ಕೆ ವಾಸ್ತವ ಸ್ಥಿತಿ ಏಕೆ ಅರ್ಥವಾಗುತ್ತಿಲ್ಲ. ನೀರಿನ ಪರಿಸ್ಥಿತಿಯ ಅವಲೋಕನ ನಡೆಸುತ್ತಿಲ್ಲವೇಕೆ ಎಂಬುದೇ ತಿಳಿಯದಾಗಿದೆ.
ವಸ್ತು ಸ್ಥಿತಿಯನ್ನು ಮನವರಿಕೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆಯೇ ಎನ್ನುವುದೂ ತಿಳಿಯುತ್ತಿಲ್ಲ ಎಂದರು. ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವ ಅಗತ್ಯವಿದೆ. ಹೋರಾಟದ ಮೂಲಕವೇ ಕೇಂದ್ರ ಸರ್ಕಾರ, ಪ್ರಾಧಿಕಾರ, ಸುಪ್ರೀಂ ಕೋರ್ಟ್ ಮತ್ತು ತಮಿಳುನಾಡಿಗೆ ವಾಸ್ತವ ಸ್ಥಿತಿ ಅರ್ಥ ಮಾಡಿಸಬೇಕಿದೆ ಎಂದು ಪ್ರತಿಪಾದಿಸಿದ ಅವರು, ಈ ನಿಟ್ಟಿನಲ್ಲಿ ಹಿರಿಯರು, ತಜ್ಞರು, ರೈತ ಮುಖಂಡರ ನಿರ್ದೇಶನದಂತೆ ಹೋರಾಟ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸೆ. 26 ಮತ್ತು 29ರ ಬಂದ್ಗೆ ನಮ್ಮ ಬೆಂಬಲ ಇದೆ ಎಂದ ಅವರು, ಅದರಲ್ಲಿ ನಾವೂ ಸಹ ಭಾಗಿಯಾಗುತ್ತೇವೆ. ಒಟ್ಟಾರೆ ರೈತರ ಸಮಸ್ಯೆ ಬಗೆಹರಿಯಬೇಕು. ಈ ಹಿನ್ನೆಲೆಯಲ್ಲಿ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.