ನಾನು ಇದುವರೆಗೆ ಯಾವ ಬಾಂಬ್ ಹಾಕಲೂ ಹೋಗಿಲ್ಲ. ಯಾವ ಹೈಕಮಾಂಡ್ ನಿಂದಲೂ ನನಗೆ ನೋಟಿಸ್ ಬಂದಿಲ್ಲ. ನನಗೆ ಯಾವ ಹೈಕಮಾಂಡೂ ಇಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು. ಬಾಪೂಜಿ ಎಂಬಿಎ ಗ್ರೌಂಡ್ನಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧಿವೇಶನದ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ, ನಿಮ್ಮ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಲಿಂಗಾಯತ ಅಧಿಕಾರಿಗಳ ಕಡೆಗಣನೆ ಆಗಿಲ್ಲ,
ಸಮಸ್ಯೆ ಬಗೆಹರಿದಿದೆ, ಸಿದ್ದರಾಮಯ್ಯ ಜೊತೆ ತಂದೆ ಮಾತನಾಡುತ್ತಾರೆ. ಅದೆಲ್ಲಾ ಮುಗಿದ ಅಧ್ಯಾಯ ಎಂದು ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶಾಮನೂರು ಶಿವಶಂಕರಪ್ಪ, ಅವರು ಹೇಳಿದ್ದಾರಲ್ವಾ. ಅವರೇ ಹೇಳಿದ ಮೇಲೆ ಮುಗಿಯಿತು. ಮತ್ತೇನೂ ಇಲ್ಲ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಯಾವಾಗ ಮಾತನಾಡುತ್ತೀರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ನೀವು ಸಿದ್ದರಾಮಯ್ಯ ಅವರನ್ನೇ ಕೇಳಿ. ಒಂದು ವೇಳೆ ಸಿದ್ದರಾಮಯ್ಯ ಜೊತೆ ಮಾತನಾಡಿದರೂ ಅದೂ ಸಿಕ್ರೇಟ್ ಆಗಿರುತ್ತದೆ. ಅದನ್ನು ಬಹಿರಂಗವಾಗಿ ಹೇಳಲು ಆಗದು ಎಂದು ಸ್ಪಷ್ಟಪಡಿಸಿದರು.