ಮೈಸೂರಿನ ಜನರು ಶಾಂತಿ ಪ್ರಿಯರು. ಕಾನೂನು ಸುವ್ಯವಸ್ಥೆಯನ್ನ ಗೌರವಿಸುವಂತಹ ಜನ. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಆಚರಣೆ ಮಾಡಲಿಕ್ಕೆ ಅವಕಾಶವಿದೆ. ಜನರ ಆಚಾರ ವಿಚಾರಗಳನ್ನ ಗೌರವಿಸಲಿಕ್ಕಾಗಿಯೇ ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ಮಾಡಲಿಕ್ಕೆ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಚಾಮುಂಡಿಬೆಟ್ಟದಲ್ಲಿ ನಡೆದ ನಾಡಹಬ್ಬ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ದಸರಾವನ್ನ ವಿಜೃಂಭಣೆಯಿಂದ ಆಚರಣೆ ಮಾಡಲಿಕ್ಕೆ ತೀರ್ಮಾನ ಮಾಡಿತ್ತು. ಆದರೆ ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಣೆ ಮಾಡಿದ್ದೇವೆ ಎಂದರು.
ಕಲೆ ಸಾಹಿತ್ಯ ಎಲ್ಲದಕ್ಕೂ ಹೆಚ್ಚಿನ ಒತ್ತು ನೀಡಿದ್ದೇವೆ. ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಸಿದ್ದ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ನಮ್ಮ ಕನ್ನಡ ಸಂಸ್ಕತಿಯನ್ನು ಬಿಂಬಿಸುವ ಆಚರಣೆ ದಸರಾ. ಭೂಮಿಯನ್ನು ಭಾಷೆಯನ್ನು ತಾಯಿಯ ಹೆಸರಿನಲ್ಲಿ ಕರೆಯುತ್ತೇವೆ. ನಮ್ಮ ನಾಡಿನ ಅಗ್ರ ದೇವತೆ ಚಾಮುಂಡಿತಾಯಿ. ಪ್ರಯತ್ನ ಮಾಡಿ ಸೋಲಬಹುದು ಆದರೆ ಪ್ರಾರ್ಥಿಸಿ ಸೋತಿಲ್ಲ ಎಂಬ ನಂಬಿಕೆ ಇಟ್ಟು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸಲು ಇಲ್ಲಿ ಬಂದಿದ್ದೇವೆ ಎಂದರು.
ನಾವು ಚುನಾವಣೆಗೆ ಮುಂಚೆ ನಾನು ಮತ್ತು ಮಾನ್ಯ ಮುಖ್ಯಮಂತ್ರಿಗಳು ತಾಯಿ ಚಾಮುಂಡಿ ದೇವಿಗೆ 5 ಗ್ಯಾರೆಂಟಿ ಗಳನ್ನು ಜಾರಿಗೆ ತರಲು ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿದ್ದೆವು. ಅದರಂತೆ ನಾವು ನುಡಿದಂತೆ ನಡೆದು 4 ಗ್ಯಾರೆಂಟಿ ಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.