ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದ ಮುಂಭಾಗದಲ್ಲಿ ಬಾಬಾ ಸಾಹೇಬರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಅಂಬೇಡ್ಕರ್ ಅವರ ಬಗ್ಗೆ ಅಪಾರ ಶ್ರದ್ಧೆ ಮತ್ತು ಗೌರವ ಹೊಂದಿರುವ ಸಿದ್ದರಾಮಯ್ಯ ವಿಗ್ರಹಕ್ಕೆ ಮಾಲಾರ್ಪಣೆ ಮಾಡುವ ಮೊದಲು ತಮ್ಮ ಶೂ ಕಳಚುವುದನ್ನು ವಿಡಿಯೋದಲ್ಲಿ ನೋಡಬಹುದು. ಮಾಲಾರ್ಪಣೆ ಮಾಡಿದ ಬಳಿಕ ಅವರು ಪುಷ್ಪಾರ್ಚನೆ ಕೂಡ ಮಾಡುತ್ತಾರೆ. ಮುಖ್ಯಮಂತ್ರಿಯೊಂದಿಗಿರುವ ಸಮಾಜ ಕಲ್ಯಾಣ ಸೇವೆ ಸಚಿವ ಡಾ ಹೆಚ್ ಸಿ ಮಹದೆವಪ್ಪ ಮತ್ತು ಮಾಜಿ ಸಚಿವ ಹೆಚ್ ಆಂಜನೇಯ ಸಹ ಬಾಬಾ ಸಾಹೇಬರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಅದಾದ ಬಳಿಕ ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದರು. ಲಿಡ್ಕರ್ ಉತ್ಪನ್ನಗಳಿಗೆ ರಾಯಭಾರಿಯಾಗಿರುವ ಚಿತ್ರ ನಟ ಡಾಲಿ ಧನಂಜಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರವಿವಾರದಿಂದ ತೆಲಂಗಾಣದಲ್ಲಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿಗೆ ವಾಪಸ್ಸಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರೆಂದು ಹೇಳಲಾಗಿತ್ತು. ಆದರೆ ಕಾರ್ಯಕ್ರಮ ಶುರುವಾದರೂ ಅವರ ಸುಳಿವಿರಲಿಲ್ಲ.