ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370ನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ, ಆರ್ಟಿಕಲ್ 370 ಅನ್ನು ರದ್ದುಗೊಳಿಸಲು ವಿಧಾನಸಭೆಗೆ ಅಧಿಕಾರವಿಲ್ಲ. ಆರ್ಟಿಕಲ್ 370 ರದ್ದತಿಗೆ ರಾಷ್ಟ್ರಪತಿಗಳಿಗೆ ಕೂಡ ಅಧಿಕಾರವಿದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದೆ.
ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನೂ ಎತ್ತಿ ಹಿಡಿದ ಸುಪ್ರೀಂ ಕೋರ್ಟ್, ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ನೀಡುವಂತೆ ಸೂಚನೆ ನೀಡಿದೆ. ಜೊತೆಗೆ 2024ರ ಸೆಪ್ಟೆಂಬರ್ 30ರ ಒಳಗಾಗಿ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಐತಿಹಾಸಿಕ ತೀರ್ಪನ್ನು ಓದಿದ ಸುಪ್ರೀಂಕೋರ್ಟ್ ಸಿಜೆಐ ಡಿವೈ ಚಂದ್ರಚೂಡ್ ಅವರು, ಸರ್ಕಾರದ ಆದೇಶವನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಸಂಸತ್ ಮತ್ತು ರಾಷ್ಟ್ರಪತಿ ಈ ನಿರ್ಧಾರವನ್ನು ಕೈಗೊಳ್ಳಬಹುದು. ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವಾಗ ರಾಷ್ಟ್ರಪತಿಗಳ ಅಧಿಕಾರಕ್ಕೂ ಕೂಡ ಮಿತಿಗಳು ಇರುತ್ತದೆ. ರಾಷ್ಟ್ರಪತಿ ಕೈಗೊಳ್ಳುವ ನಿರ್ಧಾರಗಳು ನ್ಯಾಯಾಂಗದ ಪರಾಮರ್ಶಗೆ ಒಳಪಡಲಿದೆ ಎಂದು ಹೇಳಿದರು.