ಮೈಸೂರು ಜಿಲ್ಲೆಯ ಎಚ್.ಡಿ ಕೋಟೆಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಜ್ಯದ 8 ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ದಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಈ ಹಿಂದೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ ಆರು ತಿಂಗಳುಗಳಿಗೆ ನೀಡಲಾಗುತ್ತಿತ್ತು. ನಾಲ್ಕೈದು ವರ್ಷಗಳ ನಿರಂತರ ಹೋರಾಟದ ನಂತರ ಇದನ್ನು 12 ತಿಂಗಳಿಗೆ ವಿಸ್ತರಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಕಳೆದ ರಾಜ್ಯ ಬಜೆಟ್ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಪೌಷ್ಠಿಕ ಆಹಾರ ಒದಗಿಸಲು ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ, ಬಜೆಟ್ ಅಧಿವೇಶನ ಮುಗಿದು ಆರು ತಿಂಗಳಾಗಿವೆ. ಕೇವಲ ಒಂದು ಬಾರಿ ಮಾತ್ರ ಪೌಷ್ಟಿಕ ಆಹಾರ ಸಾಮಗ್ರಿ ವಿತರಿಸಲಾಗಿದೆ” ಎಂದು ಆರೋಪಿಸಿದ್ದಾರೆ.
“ರಾಜ್ಯದ ಬಹುತೇಕ ಆದಿವಾಸಿ ಜನರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ತೀವ್ರ ಬಡತನದಲ್ಲಿ ಭೂಮಿಯು ಇಲ್ಲದೆ ಕೆಲವೊಮ್ಮೆ ಕೂಲಿಯೂ ಸಿಗದೇ ಬಹಳ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಸಮುದಾಯದ ಜನರ ಅಪೌಷ್ಟಿಕತೆಯನ್ನು ಹೋಗಲಾಡಿಸುವುದಕ್ಕಾಗಿ ಅವರಿಗೆ ನೀಡುತ್ತಿದ್ದ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ವರ್ಷವಿಡೀ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವಿತರಿಸಬೇಕು” ಎಂದು ಆಗ್ರಹಿಸಿದ್ದಾರೆ.
“ಪೌಷ್ಠಿಕ ಆಹಾರದ ಜೊತೆಗೆ ಇವರಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲು ಸೂಕ್ತ ನೀತಿಗಳನ್ನು ರೂಪಿಸಬೇಕು” ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಹಿಳಾ ಸಂಘಟನೆಯ ಮುಖಂಡೆ ಸೀಮಾ ಜಿ.ಎಸ್, ಪುಷ್ಪ ಹಾಗೂ ಆದಿವಾಸಿ ಮುಖಂಡರುಗಳಾದ ದೇವಮ್ಮ, ಶಿರಮ್ಮ ,ಮಾರಮ್ಮ,ಸುಬ್ರಹ್ಮಣ್ಯಿ,ಮಾಚಮ್ಮ,ಮಲ್ಲಮ್ಮ ಭಾಗವಹಿದ್ದರು.