ಭಾರತ್ ಜೋಡೋ ಯಾತ್ರೆಯ ಯಶಸ್ಸಿನ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಂದು ಯಾತ್ರೆ ನಡೆಸಲು ಮುಂದಾಗಿದ್ದಾರೆ. ಅವರು ಜನವರಿ 14ರಿಂದ ಮಾರ್ಚ್ 20ರವರೆಗೆ ಮಣಿಪುರದಿಂದ ಮುಂಬೈಗೆ ‘ಭಾರತ ನ್ಯಾಯ ಯಾತ್ರೆ’ಯನ್ನು (ಭಾರತಕ್ಕೆ ನ್ಯಾಯ ಬೇಕು) ನಡೆಸಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.
ಯಾತ್ರೆಯು – ಮಣಿಪುರ, ನಾಗಾಲ್ಯಾಂಡ್, ಮೇಘಾಲಯ, ಅಸ್ಸಾಂ, ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರ -14 ರಾಜ್ಯಗಳ 85 ಜಿಲ್ಲೆಗಳಲ್ಲಿ ಸಂಚರಿಸಲಿದೆ. ಒಟ್ಟು 6,200 ಕಿ.ಮೀ ಕ್ರಮಿಸಲಿದೆ.
ಕಳೆದ ವರ್ಷ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ನಡೆಸಿದ್ದರು. ಯಾತ್ರೆಗೆ ಭಾರೀ ಬೆಂಬಲ ವ್ಯಕ್ತವಾಗಿತ್ತು. ಯಾತ್ರೆಯು ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಯ ಮೇಲೆ ಪ್ರಭಾವಿಸಿತು. ಆದರೆ, ಉಳಿದ ನಾಲ್ಕು ರಾಜ್ಯಗಳಲ್ಲಿ ಪ್ರತಿಧ್ವನಿಸಲಿಲ್ಲ.
ಇದೀಗ, 2024ರ ಲೋಕಸಭಾ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಮತ್ತೊಂದು ಯಾತ್ರೆ ಆರಂಭಿಸುತ್ತಿದ್ದಾರೆ.
ಬಿಜೆಪಿ ಅಧಿಕಾರದಲ್ಲಿರುವ ಮಣಿಪುರದಲ್ಲಿ ಜನಾಂಗೀಯ ದ್ವೇಷದಿಂದ ಹಿಂಸಾಚಾರ ನಡೆದಿದೆ. ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕುಕಿ ಬುಡಕಟ್ಟು ಸಮುದಾಯದ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆದಿವೆ. ಹಲವರನ್ನು ಅಮಾನುಷವಾಗಿ ಕೊಲ್ಲಲಾಗಿದೆ. ಆ ರಾಜ್ಯದಿಂದ ರಾಹುಲ್ ಅವರು ನ್ಯಾಯ ಯಾತ್ರೆಯನ್ನು ಆರಂಭಿಸುತ್ತಿದ್ದಾರೆ.