ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಜೈಹಿಂದ್ ಖಾಸಗಿ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿ ಮಾಡಿರುವುದಾಗಿ ವರದಿಯಾಗಿದೆ.
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐನ ಬೆಂಗಳೂರು ಘಟಕವು ಜೈ ಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಬಿ ಎಸ್ ಶಿಜು ಅವರಿಗೆ ನೋಟಿಸ್ ಕಳುಹಿಸಿದ್ದು, ಹೂಡಿಕೆಯ ವಿವರಗಳನ್ನು ಸಲ್ಲಿಸುವಂತೆ ತಿಳಿಸಿದೆ.
2024ರ ಜನವರಿ 11ರಂದು ತನಿಖಾಧಿಕಾರಿ ಕೋರಿದ ಎಲ್ಲ ಅಗತ್ಯ ದಾಖಲೆಗಳೊಂದಿಗೆ ತನ್ನ ಮುಂದೆ ಹಾಜರಾಗುವಂತೆ ತಿಳಿಸಿದೆ. ಇದಲ್ಲದೆ ಸಿಆರ್ಪಿಸಿ 91ರಡಿ ಡಿಸಿಎಂ ಡಿಕೆಶಿ ಸೇರಿದಂತೆ 30ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡಲಾಗಿದೆ.
ಕೇರಳ ಮೂಲದ ಚಾನಲ್ನಲ್ಲಿ ಹೂಡಿಕೆ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ಹೂಡಿಕೆಗೆ ಹಾಕಲಾದ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ ಸಿಬಿಐ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಪತ್ನಿ ಉಷಾ ಶಿವಕುಮಾರ್ ಸೇರಿದಂತೆ ಬಂಡವಾಳ ಹೂಡಿರುವ 30ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡಿದೆ.
ಸಿಆರ್ಪಿಸಿ ಸೆಕ್ಷನ್ 91ರ ಅಡಿಯಲ್ಲಿ ಹೊರಡಿಸಲಾದ ತನ್ನ ನೋಟಿಸ್ನಲ್ಲಿ, ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವುಗಳನ್ನು ಮಾಡಿದ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಜೈ ಹಿಂದ್ ಚಾನಲ್ಗೆ ಹೇಳಿದೆ. ಹಿಡುವಳಿಗಳ ಹೇಳಿಕೆ, ಅವರ ಲೆಡ್ಜರ್ ಖಾತೆಗಳು, ಒಪ್ಪಂದದ ಟಿಪ್ಪಣಿಗಳು ಮತ್ತು ಇತರ ವಿವರಗಳ ಜೊತೆಗೆ ಎಲ್ಲ ಷೇರು ವಹಿವಾಟುಗಳ ವಿವರ ನೀಡುವಂತೆ ಸಿಬಿಐ ಸೂಚಿಸಿದೆ.
ಜೈಹಿಂದ್ ಚಾನಲ್ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್. ಶಿಜು ಅವರು ಸಿಬಿಐ ನೋಟಿಸ್ ಸ್ವೀಕರಿಸಿದ್ದು, ಸಂಸ್ಥೆ ಕೋರಿರುವ ಎಲ್ಲಾ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದು, “ಎಲ್ಲ ದಾಖಲೆಗಳು ತಮ್ಮ ಬಳಿ ಇವೆ ಮತ್ತು ಯಾವುದೇ ಅಕ್ರಮ ಭಾಗಿಯಾಗಿಲ್ಲ” ಎಂದು ಹೇಳಿದ್ದಾರೆ.
ಪಿಟಿಐ ಜೊತೆ ಮಾತನಾಡಿರುವ ಅವರು ಅವರು, “ಈ ಪ್ರಕರಣವನ್ನು ಮತ್ತೆ ಕೆದಕಿರುವುದು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ಡಿಕೆ ಶಿವಕುಮಾರ್ ಅವರಿಗೆ ಕಿರುಕುಳ ಮಾಡುವ ಪ್ರಯತ್ನವಾಗಿದೆ” ಎಂದು ದೂರಿದ್ದಾರೆ.
ಶಿವಕುಮಾರ್ ವಿರುದ್ಧ ಸಿಬಿಐ 2020ರಲ್ಲಿ ಪ್ರಕರಣ ದಾಖಲಿಸಿದ್ದು, 2013 ಮತ್ತು 2018ರ ನಡುವೆ ಅವರು 74 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಗಳಿಸಿದ್ದಾರೆ ಎಂದು ಆರೋಪಿಸಿದ್ದರು. ಅದು ಅವರ ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಲಾಗಿದೆ.