ಬೆಂಗಳೂರು ಜ.06: ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯವಾಗಿ ದೂರು ಕೊಡಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ ವಿಧಾನಸೌಧ ಕ್ಷೇತ್ರಗಳನ್ನು ಒಟ್ಟು ಸೇರಿಸಿ ಯಲಹಂಕದಲ್ಲಿ ಶುಕ್ರವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಚಿವರು- ಶಾಸಕರು, ಪೊಲೀಸರು, ಕಂದಾಯ ಅಧಿಕಾರಿಗಳ ಸೇರಿದಂತೆ ಯಾರ ಹೆಸರಿನಲ್ಲಿ ಹಣ ಕೇಳಿದರೂ ದೂರು ಕೊಡಿ. ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ಅಧಿಕಾರಿಗಳು ಗೌರವ ನೀಡದಿದ್ದಾಗ, ಲಂಚ ಕೇಳಿ ಹಿಂಸೆ ಕೊಟ್ಟಾಗ ಜನಸಾಮಾನ್ಯರು ರಾಜಕಾರಣಿಗಳ ಬಳಿ ಬರುತ್ತಾರೆ. ಇತ್ತೀಚಿಗೆ ಈ ರೀತಿಯ ದೂರುಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ಸಮಸ್ಯೆ ತಪ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.