1992ರ ಅಯೋಧ್ಯೆ ರಾಮಮಂದಿರ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಜನವರಿ 3ರಂದು ನಗರದ ಶಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ 43 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು ಜನವರಿ 5ರಂದು ದೂರು ನೀಡಿದ್ದು ದೂರಿನಲ್ಲಿ ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಘೋಷಣೆ ಕೂಗಿದ್ದಲ್ಲದೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪ್ರತಿಭಟನೆ ಪ್ರಕರಣದಲ್ಲಿ ಆರ್ ಅಶೋಕ್ ಎ1 ಆರೋಪಿಯಾಗಿದ್ದು ಶಾಸಕರಾದ ಅರವಿಂದ ಬೆಲ್ಲ, ಮಹೇಶ್ ಟೆಂಗಿನಕಾಯಿ ಕ್ರಮವಾಗಿ ಎ2, ಎ3 ಆರೋಪಿಯಾಗಿದ್ದಾರೆ.
ಇನ್ನುಳಿದಂತೆ ಎಂ.ಆರ್. ಪಾಟೀಲ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ್, ಶಿವು ಮೆಣಸಿನಕಾಯಿ, ರೂಪಾ ಶೆಟ್ಟಿ, ಉಮೇಶಗೌಡ ಕೌಜಲಗಿ, ತಿಪ್ಪಣ್ಣ ಮಜ್ಜಗಿ ಸೇರಿದಂತೆ ಬಿಜೆಪಿಯ ಇತರ ಮುಖಂಡರ ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.