ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ವಿಚಾರವಾಗಿ ಸಾಧಕ ಬಾಧಕಗಳ ಸಂಪೂರ್ಣ ಅಧ್ಯಯನದ ನಂತರವೇ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ. ಚಾಮುಂಡಿ ಬೆಟ್ಟದ ರೋಪ್ವೇ ಯೋಜನೆ ಅನುಷ್ಠಾನಗೊಂಡರೆ ಪರಿಸರ ವ್ಯವಸ್ಥೆಗೆ ಹಾನಿಯಾಗಬಹುದು ಎಂದು ವಿವಿಧ ಪರಿಸರ ಸಂಘಟನೆಗಳು ಮತ್ತು ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ರೋಪ್ ವೇಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಚಾಮುಂಡಿ ಬೆಟ್ಟದ ಅಭಿವೃದ್ಧಿ ಯೋಜನೆಗಳ ಬಗ್ಗೆ ಪರಿಸರ ಹೋರಾಟಗಾರರು ಎತ್ತಿರುವ ಆಕ್ಷೇಪಗಳನ್ನು ಗಮನಿಸಿದ್ದೇವೆ. ಈ ಯೋಜನೆ ಸರ್ಕಾರದ ಮುಂದಿರುವುದು ನಿಜ. ಸರಿಯಾದ ಪರಾಮರ್ಶೆ, ಅಧ್ಯಯನ ನಡೆಸಿಯೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.