ಕೋಲಾರ: ಬಾಲ್ಯ ವಿವಾಹ ಹಾಗೂ ಬಾಲಗರ್ಭಿಣಿಯಂತಹ ಸಮಾಜಘಾತಕ ಪದ್ಧತಿಗಳು ನಿರ್ಮೂಲನಾವಾಗಬೇಕಾದರೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಅತ್ಯವಶ್ಯಕ ಹಾಗೂ ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯೆಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾ.ಎಲ್.ನಾರಾಯಣಸ್ವಾಮಿ ತಿಳಿಸಿದರು
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ 98 ಬಾಲಗರ್ಭಿಣಿಯರು ಇರುವರೆಂದು ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಆದರೆ ಇಲ್ಲಿ ಅಧಿಕಾರಿಗಳು ಈ 98 ಪ್ರಕರಣಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಕಟ್ಟುನಿಟ್ಟಾಗಿ ಕ್ರಮಕೈಗೊಂಡಿದ್ದಾರೆ. ಹಾಗಾಗಿ ಕೋಲಾರ ಜಿಲ್ಲೆಯೂ ಬೇರೆ ಜಿಲ್ಲೆಗಳಿಗೆ ಮಾದರಿಯಾಗಿದೆ. ಇಂತಹ ಆಧುನಿಕ ಕಾಲದಲ್ಲೂ ಬಾಲ್ಯ ವಿವಾಹ ನಡೆಯುತ್ತಿರುವುದು ಖೇದದ ಸಂಗತಿಯಾಗಿದ್ದು, ಇದಕ್ಕೆ ಮುಖ್ಯ ಬಡತನ ಮತ್ತು ಅನಕ್ಷರತೆಯಾಗಿದೆ. ಇದಕ್ಕಾಗಿ ಪೋಷಕರು ಕಡ್ಡಾಯವಾಗಿ ಹೆಣ್ಣು ಮಕ್ಕಳನ್ನು ಸುಶಿಕ್ಷಿತರನ್ನಾಗಿ ಮಾಡಬೇಕು ಹಾಗಾದಲ್ಲಿ ಹೆಣ್ಣು ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಂಶಿಕೃಷ್ಣವರು 98 ಪ್ರಕರಣಗಳ ಬಗ್ಗೆ ವಿವರವಾಗಿ ಆಯೋಗದ ಸಭೆಗೆ ವರದಿ ನೀಡಿ ಮಾತನಾಡಿದರು.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಶ್ಯಾಮ್ಭಟ್, ಕೋಲಾರ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮೀ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಕೋಲಾರ ಡಿ.ವೈ.ಎಸ್.ಪಿ ಶಿವಕುಮಾರ್, ಕೆ.ಜಿ.ಎಫ್. ಡಿ.ವೈ.ಎಸ್.ಪಿ ಪಾಂಡುರಂಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎನ್. ನಾರಾಯಣಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.