ಬೆಂಗಳೂರು, ಮಾರ್ಚ 07: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸದಂತೆ 24 ನಿವೃತ್ತ ಐಎಎಸ್, ಐಪಿಎಸ್, ಐಎಫ್ಎಸ್ ಮತ್ತು ಐಆರ್ಎಸ್ ಅಧಿಕಾರಿಗಳು ಉಪ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದನ್ನು ವಿಪಕ್ಷ ನಾಯಕ ಆರ್ ಅಶೋಕ್ ಸ್ವಾಗತಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು “ಮಾಜಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ನಿಲುವನ್ನು ನಾನು ಸ್ವಾಗತಿಸುತ್ತೇನೆ ಮತ್ತು ಪ್ರಶಂಸಿಸುತ್ತೇನೆ. ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಪ್ರಕರಣ ತನಿಖೆ ಮುಗಿಯುವವರೆಗು ಪ್ರತಿಜ್ಞಾವಿಧಿ ಭೋದಿಸಬಾರದು ಎಂದು ಉಪ ರಾಷ್ಟ್ರಪತಿಗಳಿಗೆ ಹಿರಿಯ ಅಧಿಕಾರಿಗಳು ಪತ್ರ ಬರೆದಿದ್ದಾರೆ”.
ದೇಶದ್ರೋಹಿಗಳಿಂದ ಸುತ್ತುವರೆಯಲ್ಪಟ್ಟಿದ್ದ ನಾಯಕ ಪ್ರಜಾಪ್ರಭುತ್ವದ ದೇವಾಲಯವಾಗಿರುವ ಸಂಸತ್ತಿಗೆ ಪ್ರವೇಶಿಸುವ ಹಕ್ಕಿಲ್ಲ. ಒಂದು ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನಮ್ಮ ದೇಶದ ಬಗ್ಗೆ ಗೌರವವಿದ್ದರೆ ನಾಸಿರ್ ಹುಸೇನ್ ಅವರ ರಾಜೀನಾಮೆ ಪಡೆಯಬೇಕು ಮತ್ತು ಮರು ಚುನಾವಣೆಗೆ ಹೋಗಬೇಕು” ಎಂದು ಒತ್ತಾಯಿಸಿದ್ದಾರೆ.