ಬೆಂಗಳೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್, ಸಂಸದ ಪ್ರತಾಪ್ ಸಿಂಹ ಅವರಿಗೆ ಕೈತಪ್ಪುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕ್ಷೇತ್ರದಲ್ಲಿ ಕೆಲಸ ಹಾಗೂ ಹಿಂದುತ್ವದ ಮೇಲೆ ಗುರುತಿಸಿಕೊಂಡಿರುವ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪುತ್ತಿರುವ ವಿಚಾರ ತಿಳಿದು ಇಡೀ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಸ್ವತಃ ಪ್ರತಾಪ್ ಸಿಂಹ ಅವರೇ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಅವರು ಪ್ರತಾಪ್ ಸಿಂಹ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸುದೀರ್ಘ ಚರ್ಚೆ ನಡೆಸಿದ ಬಳಿಕ ಪ್ರತಾಪ್ ಸಿಂಹ ತನ್ನ ಸಾಧನೆಯ ವರದಿ ಒಪ್ಪಿಸಿದರು.
ಅಗರ್ವಾಲ್ ಭೇಟಿ ಬಳಿಕ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರತಾಪ್ ಸಿಂಹ, ಟಿಕೆಟ್ ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದರು. “ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ನಾನು ಕೇವಲ ಒಂದು ಗಂಟೆ ಭೇಟಿ ಮಾಡಿದೆ. ನಾನು ಮೊದಲೇ ಹೇಳಿದ್ದೇನೆ ಮತ್ತು ಮತ್ತೊಮ್ಮೆ ಹೇಳುತ್ತಿದ್ದೇನೆ, ನರೇಂದ್ರ ಮೋದಿ ಇಲ್ಲದೆ ನಾನು ಏನೂ ಅಲ್ಲ. ನನಗೆ ಟಿಕೆಟ್ ಸಿಗುತ್ತದೆ ಎಂದು ಭಾವಿಸುತ್ತೇನೆ, ಇಲ್ಲದಿದ್ದರೆ ನಾನು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಧನ್ಯವಾದ” ಎಂದು ಬರೆದುಕೊಂಡಿದ್ದಾರೆ.