ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದೆ. ಧಾರವಾಡದಲ್ಲಿ ಹಾಲಿ ಸಂಸದ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಮತ್ತೆ ಮಣೆ ಹಾಕಲಾಗಿದೆ. ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಘೋಷಿಸಿದೆ. ಇದರೊಂದಿಗೆ, ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಮತ್ತೆ ಹಿನ್ನಡೆಯಾದಂತಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ಮೇಲೆ ಶೆಟ್ಟರ್ ಕಣ್ಣಿಟ್ಟಿದ್ದರು. ಒಂದು ವೇಳೆ ಧಾರವಾಡದಿಂದ ಸಿಗದಿದ್ದರೆ ಹಾವೇರಿ ಕ್ಷೇತ್ರ ಟಿಕೆಟ್ ನೀಡುವಂತೆ ಮನವಿಯನ್ನೂ ಮಾಡಿದ್ದರು. ಈಗ ಇತ್ತ ಧಾರವಾಡವೂ ಇಲ್ಲ, ಅತ್ತ ಹಾವೇರಿಯೂ ಇಲ್ಲ ಎಂಬಂತಾಗಿದೆ ಅವರ ಪರಿಸ್ಥಿತಿ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡುತ್ತೇವೆ ಎಂಬ ಬಿಜೆಪಿ ನಾಯಕರ ಭರವಸೆ ಮೇರೆಗೆ ಶೆಟ್ಟರ್ ಪಕ್ಷಕ್ಕೆ ವಾಪಸ್ಸ್ ಆಗಿದ್ದರು. ಪಟ್ಟಿ ಬಿಡುಗಡೆಯಾಗುವ ಕೊನೆಯ ಕ್ಷಣದ ವರೆಗೂ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದರು.
ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ರಾಯಚೂರು ಪ್ರವಾಸದಲ್ಲಿದ್ದ ಶೆಟ್ಟರ್, ಅರ್ಧಕ್ಕೆ ಪ್ರವಾಸ ಮೊಟಕುಗೊಳಿಸಿ ವಾಪಸ್ ಆಗಿದ್ದಾರೆ. ಇಂದು ಬೆಂಗಳೂರಿಗೆ ಪ್ರಯಾಣ ಬೆಳಸುವ ಸಾಧ್ಯತೆ ಇದೆ. ಮಾಜಿ ಸಿಎಂ ಯಡಿಯೂರಪ್ಪ ಕೂಡಾ ಶೆಟ್ಟರ್ ಪರ ಲಾಬಿ ಮಾಡಿದ್ದರು. ಹೀಗಾಗಿ ಹಿರಿಯ ನಾಯಕರನ್ನು ಶೆಟ್ಟರ್ ಭೇಟಿ ಮಾಡುವ ಸಾಧ್ಯತೆ ಇದೆ.