ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಸಚಿವ ಮಹದೇವಪ್ಪರಂತಹ ದೊಡ್ಡ ನಾಯಕರ ಅವಶ್ಯಕತೆ ಇಲ್ಲ, ಸಣ್ಣ ನಾಯಕರನ್ನು ನಿಲ್ಲಿಸಿದರೂ ಗೆಲುವು ಸಾಧಿಸುತ್ತಾರೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ನಂಜುಂಡಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾವುದೇ ಸಚಿವರನ್ನು ಕಣಕ್ಕಿಳಿಯುವಂತೆ ಸೂಚಿಸಿಲ್ಲ. ಚಾಮರಾಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಈ ಕ್ಷೇತ್ರದಲ್ಲಿ ಸಾಮಾನ್ಯ ನಾಯಕ, ಕಾರ್ಯಕರ್ತನನ್ನು ಕಣಕ್ಕಿಳಿಸಿದರೂ ಗೆಲುವು ಸಾಧಿಸಬಹುದು. ಹಾಗಾಗಿ ಮಹದೇವಪ್ಪರಂತಹ ದೊಡ್ಡ ನಾಯಕರು ಇಲ್ಲಿಂದ ಕಣಕ್ಕಿಳಿಯುವ ಅಗತ್ಯವಿಲ್ಲ. ಮಹದೇವಪ್ಪ ಅವರ ಪುತ್ರನಿಗೆ ಟಿಕೆಟ್ ಕೇಳಿರುವುದು ಸಹಜ. ನಾನು ಕೂಡ ಟಿಕೆಟ್ ಕೇಳಿದ್ದೇನೆ.ಇನ್ನೂ ಅಭ್ಯರ್ಥಿ ಯಾರೆಂದು ಅಂತಿಮ ಆಗಿಲ್ಲ. ಮುಂದಿನ ಎರಡು ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮವಾಗಲಿದೆ ಎಂದು ತಿಳಿಸಿದರು.