ಹುಬ್ಬಳ್ಳಿ : ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಂಡಾಯವೆದ್ದಿದ್ದು, ಸ್ವಪಕ್ಷದ ವಿರುದ್ಧವೇ ಸಿಡಿದೆದ್ದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಎಸ್ ಈಶ್ವರಪ್ಪ ಅವರ ಬಂಡಾಯ ಶಮನಕ್ಕೆ ರಾಜ್ಯ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಈ ನಡುವೆ ನಾಳೆ ಶಿವಮೊಗ್ಗ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮಾವೇಶ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಬಿಜೆಪಿ ನಾಯಕರು ಕೆಎಸ್ ಈಶ್ವರಪ್ಪ ಅವರ ದುಂಬಾಲು ಬಿದ್ದಿದ್ದಾರೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಕೆ.ಎಸ್.ಈಶ್ವರಪ್ಪ ಅವರ ಬಂಡಾಯ ಶಮನ ಆಗುತ್ತೆ. ನಾಳೆಯ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರಬಹುದು ಎಂದು ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಮನವೊಲಿಕೆ ಮಾಡುವುದಕ್ಕೆ ಬಹಳ ಸಮಯ ಇದೆ. ಮತದಾನಕ್ಕೆ 40 ದಿನ ಇದೆ, ನಾಮಿನೇಷನ್ಗೆ 20 ದಿನ ಇದೆ. ಅಷ್ಟರಲ್ಲಿ ನಾವೆಲ್ಲ ಸರಿ ಮಾಡುತ್ತೇವೆ ಎಂದರು.