ಮಂಡ್ಯ : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಎನ್.ಡಿ.ಎ ಒಕ್ಕೂಟದಲ್ಲಿ ಸೇರ್ಪಡೆಯಾಗಿದೆ. ಇದು ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಮುಳುವಾಗಿ ಪರಿಣಮಿಸಿದೆ. ಈ ಬಾರಿಯೂ ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತೇನೆಂದು ಪಟ್ಟು ಹಿಡಿದಿರುವ ಸುಮಲತಾ ಅಂಬರೀಶ್ ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಟಿಕೆಟ್ ನನಗೆ ಸಿಗುತ್ತದೆ ಎಂದು ಸುಮಲತಾ ಅಂಬರೀಶ್ ವಿಶ್ವಾಸ ವ್ಯಕ್ತಪಡಿಸಿದ್ದರು. ಅಲ್ಲದೆ ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದು ಹೇಳಿದ್ದರು. ಆದರೆ ಇದೀಗ ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಂಡ್ಯ ಟಿಕೆಟ್ ಜೆಡಿಎಸ್ಗೆ ಫಿಕ್ಸ್ ಆಗುತ್ತಿದ್ದಂತೆಯೇ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬುಲಾವ್ ನೀಡಿದ್ದಾರೆ. ವರಿಷ್ಠರ ಕರೆ ಮೇರೆಗೆ ಸುಮಲತಾ ಅಂಬರೀಶ್ ದೆಹಲಿಗೆ ದೌಡಾಯಿಸಿದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವಂತೆ ಜೆ.ಪಿ ನಡ್ಡಾ ಮನವೊಲಿಸುವ ಸಾಧ್ಯತೆ ಇದೆ. ಅಥವಾ ಬೇರೊಂದು ಕ್ಷೇತ್ರದ ಟಿಕೆಟ್ ನೀಡುವ ಸಾಧ್ಯತೆಯೂ ಇದೆ. ಆದರೆ ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತೇನೆಂದು ಪಟ್ಟು ಹಿಡಿದಿರುವ ಸುಮಲತಾ ಅವರ ಮುಂದಿನ ನಡೆ ಏನು ಎಂಬುವುದು ಸಾಕಷ್ಟು ಕುತೂಹಲ ಕೆರಳಿಸಿದೆ.