ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ಅವರು ಬಿಜೆಪಿಯನ್ನು ತೊರೆಯುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲ್ಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ ಎಂದು ಡಿವಿಎಸ್ ಹೇಳಿರುವುದು ಕುತೂಹಲ ಮೂಡಿಸಿದೆ. ಈ ಬಾರಿ ಟಿಕೆಟ್ ಮಿಸ್ ಆಗಿರುವುದಕ್ಕೆ ಅಸಮಾಧಾನಗೊಂಡಿರುವ ಡಿವಿಎಸ್ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಇನ್ನು, ಮೈಸೂರಿನಲ್ಲಿ ಯದುವೀರ ಒಡೆಯರ್ ವಿರುದ್ಧ ಡಿವಿ ಸದಾನಂದಗೌಡ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ನಾಯಕರು ಡಿವಿ ಸದಾನಂದಗೌಡ ಜೊತೆ ಮಾತುಕತೆ ನಡೆಸುತ್ತಿದ್ದು, ಒಂದೆರಡು ದಿನದಲ್ಲಿ ಡಿವಿ ಸದಾನಂದಗೌಡರು ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆ ಇದೆ.