– ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ
– ಬಡಗಲಪುರ ನಾಗೇಂದ್ರ ಕಣಕ್ಕಿಳಿಸಲು ಚಿಂತನೆ
ಪ್ರತಿನಿಧಿ ವರದಿ ಮೈಸೂರು
ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿಯಾಗಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಅವಕಾಶ ನೀಡಬೇಕೆಂದು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮನವಿ ಮಾಡಿದರು.
ಕಳೆದ 2023ರ ವಿಧಾನಸಭೆ ಚುನಾವಣೆ ವೇಳೆ ರೈತ, ದಲಿತ ಚಳವಳಿ ಸೇರಿದಂತೆ ಸಾಮಾಜಿಕ ಚಳವಳಿಗಳು ಸಂಘಟಿತವಾಗಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಕೆಲಸ ಮಾಡಿದೆ. ಇದರಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಈ ಬಾರಿಯ ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಅದೇ ಪ್ರಯತ್ನ ಮುಂದುವರಿಸಲಾಗುವುದು. ಚಳವಳಿಗಾರರೊಬ್ಬರಿಗೆ ಇಂಡಿಯಾ ಒಕ್ಕೂಟ ಒಂದು ಸ್ಥಾನ ಬಿಟ್ಟುಕೊಟ್ಟಲ್ಲಿ ಅದು ಉತ್ತಮ ಬೆಳವಣಿಗೆಯಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಬಡಗಲಪುರ ನಾಗೇಂದ್ರ ಅವರು ಮೈಸೂರು ಜಿಲ್ಲೆಯವರಾಗಿ ವಿದ್ಯಾರ್ಥಿ ಜೀವನದಲ್ಲಿ ಜನಮುಖಿ ಚಳವಳಿಯಲ್ಲಿ ಗುರುತಿಸಿಕೊಂಡಿದ್ದಾರೆ, ವೃತ್ತಿಯಲ್ಲಿ ವಕೀಲರಾಗಿಯೂ ಹೆಸರು ಪಡೆದಿದ್ದಾರೆ. ಎಲ್ಲ ವರ್ಗದಲ್ಲಿಯೂ ಒಳ್ಳೆಯ ಹೆಸರು ಮಾಡಿರುವ ಇವರು ಜ್ಯಾತ್ಯಾತೀತ ಮನೋಭಾವ ಹೊಂದಿರುವ ವ್ಯಕ್ತಿಯಾಗಿದ್ದು, ಪ್ರಭಾವಿ ಹೋರಾಟಗಾರರಾದ ಬಡಗಲಪುರ ನಾಗೇಂದ್ರ ಅವರನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸಿದರೆ ಕಾಂಗ್ರೆಸ್ ಗೆಲುವು ನಿಶ್ಚಿತವಾಗಲಿದೆ, ಇದು ಒಂದು ಹೊಸ ಮಾದರಿ ರಾಜಕಾರಣಕ್ಕೆ ನಾಂದಿಯಾಗುತ್ತದೆ ಮತ್ತು ರಾಜ್ಯದ ಬೇರೆ ಬೇರೆ ಲೋಕಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ಗೆ ಖಂಡಿತ ಅನುಕೂಲವಾಗುತ್ತದೆ ಎಂದರು.
ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಮತ್ತು ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರು ಎರಡೂ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಾಲಿ ಮತ್ತು ಮಾಜಿ ಶಾಸಕರು ಟಿಕೆಟ್ ನೀಡಿ ಬೆಂಬಲ ನೀಡಬೇಕು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ, ಮಂಡಕಳ್ಳಿ ಮಹೇಶ್, ನಾಗನಹಳ್ಳಿ ವಿಜೇಂದ್ರ ಹಾಗೂ ನೇತ್ರಾವತಿ ಹಾಜರಿದ್ದರು.
=================