ಬೆಂಗಳೂರು : ಐವರು ಸಚಿವರ ಮಕ್ಕಳೂ ಸೇರಿದಂತೆ ಕರ್ನಾಟಕದ 16 ಲೋಕಸಭಾ ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಮಂಗಳವಾರ ಅಂತಿಮಗೊಳಿಸಿದೆ. ಉಳಿದ ಐದು ಸ್ಥಾನಗಳ ಬಗ್ಗೆ ನಿರ್ಧರಿಸಲು ಇಂದು ಮತ್ತೊಮ್ಮೆ ಸಭೆ ನಡೆಯಲಿದ್ದು, ಬಹುತೇಕ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಮೊದಲ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿರುವ ಕಾಂಗ್ರೆಸ್, ಉಳಿದ ಕೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಮಂಗಳವಾರ ಹೈವೋಲ್ಟೇಜ್ ಮೀಟಿಂಗ್ ನಡೆಸಿತ್ತು. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಗುಜರಾತ್, ತೆಲಂಗಾಣ, ತಮಿಳುನಾಡು ಸೇರಿದಂತೆ ಕರ್ನಾಟಕದ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ. ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಘೋಷಣೆ ಮಾಡುವುದಾಗಿ ಹೇಳಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ (ಬೆಂಗಳೂರು ದಕ್ಷಿಣ), ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (ಚಿಕ್ಕೋಡಿ), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ (ಬೆಳಗಾವಿ), ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತಾ (ಬಾಗಲಕೋಟೆ), ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ (ಬೀದರ್) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತಗೊಂಡಿದೆ.