ಪ್ರತಿನಿಧಿ ವರದಿ ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮಾಜಿ ಸಂಸದ ಎಂ.ವೀರಪ್ಪ ಮೊಯ್ಲಿ ಅವರಿಗೆ ನೀಡಿದಲ್ಲಿ ಪಕ್ಷದ ಗೆಲುವು ಸುಲಭವಾಗಲಿದೆ. ಇದು ಅವರಿಗೆ ರಾಜಕೀಯ ಜೀವನದಲ್ಲಿ ಕೊನೆಯ ಚುನಾವಣೆ ಆಗಿರುವುದರಿಂದ ಅವಕಾಶ ಕಲ್ಪಿಸಬೇಕು ಎಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ಎನ್.ರಮೇಶ್ ಪಕ್ಷದ ವರಿಷ್ಠರನ್ನು ಒತ್ತಾಯಿಸಿದರು.
ಎಂ.ವೀರಪ್ಪ ಮೊಯ್ಲಿ ಅವರು ಮುಖ್ಯಮಂತ್ರಿಯಾಗಿ, ಇದೇ ಕ್ಷೇತ್ರದ ಸಂಸದರಾಗಿ, ಕೇಂದ್ರ ಸಚಿವರಾಗಿ ಹಲವು ಜನಪರ ಕೊಡುಗೆ ನೀಡುವ ಜತೆಗೆ ತಮ್ಮದೇ ಇತಿಹಾಸ ಹೊಂದಿದ್ದಾರೆ. ತಮಗೆ ರಾಜಕೀಯ ಪುನರ್ಜನ್ಮ ನೀಡಿದ ತುಡಿತವುಳ್ಳ ವೀರಪ್ಪಮೊಯ್ಲಿ ಅವರಿಗೆ ಟಿಕೆಟ್ ನೀಡಬೇಕೆಂದು ವರಿಷ್ಠರಿಗೆ ಪತ್ರ ರವಾನಿಸಲಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಮಾಜಿ ಶಾಸಕ ಎಂ.ಶಿವಾನಂದ ಮಾತನಾಡಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅನುಭವಿ ರಾಜಕಾರಣಿ, ಪಕ್ಷ ಸಂಘಟನೆಗೆ ಒತ್ತು ನೀಡಿ ಪಕ್ಷವನ್ನು ಕ್ಷೇತ್ರದಲ್ಲಿ ಸದೃಢಗೊಳಿಸಿದ್ದಾರೆ. ಜನರ ಋಣ ನನ್ನ ಮೇಲಿದೆ ಎಂದು ಕ್ಷೇತ್ರದ ಅಭಿವೃದ್ಧಿ ಶ್ರಮಿಸಿರುವ ವೀರಪ್ಪ ಮೊಯ್ಲಿ ಅವರಿಗೆ ಕ್ಷೇತ್ರದ ಟಿಕೆಟ್ ನೀಡಿದಲ್ಲಿ ಅವರ ಗೆಲುವು ಸಾಧಿಸುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅಭಿಪ್ರಾಯಪಟ್ಟರು.
ಕ್ಷೇತ್ರದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ತಂದಿದ್ದು, ಪ್ರಮುಖವಾಗಿ ಎತ್ತಿನಹೊಳೆ ಯೋಜನೆ ತರುವಲ್ಲಿ ಅವರ ಪಾತ್ರ ಮಹತ್ತರ. ಇನ್ನು ೨೦೧೯ರ ಚುನಾವಣೆಯಲ್ಲಿ ಸೋಲಿನ ನಂತರವೂ ನಿರಂತರವಾಗಿ ಜನರ ಸಂಪರ್ಕ ಹೊಂದಿ ಅಹವಾಲುಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದಾರೆ. ಮತ್ತೊಮ್ಮೆ ಚುನಾವಣೆಯಲ್ಲಿ ಅವರಿಗೆ ಅವಕಾಶ ಕಲ್ಪಿಸಿದ್ದಲ್ಲಿ, ಅವರು ಸುಲಭವಾಗಿ ಸಾಧಿಸಲಿದ್ದಾರೆ. ಈ ನಿಟ್ಟಿನಲ್ಲಿ ಮೊಯ್ಲೆ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.
ಕ್ಷೇತ್ರದಲ್ಲಿ ಯಾವುದೇ ಬಣ ರಾಜಕೀಯ ಇಲ್ಲವಾಗಿದ್ದು, ಹಿರಿಯ ರಾಜಕಾರಣಿಗೆ ಮನ್ನಣೆ ಸಿಗಬೇಕು. ಅಲ್ಲದೆ ಯುವಕರಿಗೆ ಅವಕಾಶಗಳನ್ನು ಕಲ್ಪಿಸಬೇಕು. ಆದರೆ ಹಿರಿಯರ ಮಾರ್ಗದರ್ಶನ ಪಡೆಯುವುದು ಅಗತ್ಯವಾಗಿದೆ. ಆದರೆ ಪಕ್ಷವು ಯಾವುದೇ ಅಭ್ಯರ್ಥಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಗ್ಗಟ್ಟಿನಿಂದ ಅವರ ಗೆಲುವಿಗೆ ಶ್ರಮಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಕಳವಾರ ಶ್ರೀಧರ್, ವಿನೋದ್ ಕುಮಾರ್, ರಾಮು, ವೆಂಕಟೇಶ್, ಮುನಿಕೃಷ್ಣಪ್ಪ, ವೆಂಕಟಲಕ್ಷ್ಮಮ್ಮ, ವೆಂಕಟರತ್ನಮ್ಮ ಇದ್ದರು.