ಚಾಮರಾಜನಗರ : ಮೇಕೆದಾಟುವಿನಲ್ಲಿ ಕರ್ನಾಟಕ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆ ನಿರ್ಮಾಣಕ್ಕೆ ತಡೆಯೊಡ್ಡುತ್ತೇವೆ ಎಂದು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ತಮಿಳು ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಸಿ ಕರ್ನಾಟಕ ಸೇನಾಪಡೆ ಮುಖಂಡರು ಜಿಲ್ಲಾಧಿಕಾರಿ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಸಲ್ಲಿಸಿದರು.
ನಗರದ ಜಿಲ್ಲಾಡಳಿತ ಭವನದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿ ಬಳಿಕ ಮಾತನಾಡಿದ ಸಂಘಟನೆಯ ಅಧ್ಯಕ್ಷ ಶ್ರೀನಿವಾಸಗೌಡ, ತಮಿಳುನಾಡು ಸರ್ಕಾರ ಲೋಕಸಭೆ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯದಲ್ಲಿರುವ ಮೇಕೆದಾಟು ಯೋಜನೆಯನ್ನು ನಾವು ಮಾಡಲು ಬಿಡುವುದಿಲ್ಲವೆಂದು ಘೋಷಣೆ ಮಾಡಿಕೊಂಡಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ತಮಿಳುನಾಡು, ಕರ್ನಾಟಕ ರಾಜ್ಯದ ಕುಡಿಯುವ ನೀರಿನ ಯೋಜನೆಯ ಬಗ್ಗೆ ಮಾತನಾಡಿರುವುದು ಚುನಾವಣಾ ನೀತಿಯನ್ನು ಉಲ್ಲಂಘನೆ ಮಾಡಿದಂತಾಗಿದೆ. ಇದರಿಂದ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲೀನ್ ಅವರು ಪ್ರಜಾಪ್ರಭುತ್ವ ವ್ಯಸವಸ್ಥೆಗೆ ಅಗೌರವ ತೋರಿದ್ದಾರೆ ಎಂದರು.
ರಾಜ್ಯದ ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ರಾಜ್ಯದ ಅನೇಕ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯಸಿಗಲಿದೆ. ಕುಡಿಯುವ ನೀರಿನ ಯೋಜನೆಗೆ ಯಾವುದೇ ಕಾರಣಕ್ಕೂ ಯಾವುದೆ ಸರ್ಕಾರವಾಗಲಿ, ಅಥವಾ ವ್ಯಕ್ತಿಯಾಗಲಿ ಅಡ್ಡಿಪಡಿಸಲು ಸಾಧ್ಯವಿಲ್ಲ. ಇದು ಸ್ಪಷ್ಟವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಕುಡಿಯುವ ನೀರಿನ ಹಕ್ಕು ಪ್ರತಿಯೊಬ್ಬರಿಗೂ ಇದೆ. ಇಷ್ಟೆಲ್ಲಾ ಗೊತ್ತಿದ್ದರೂ ತಮಿಳುನಾಡು ಸರ್ಕಾರ ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ಇಂತಹ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ ಎಂದರು.
ಚುನಾವಣೆ ಸಂದರ್ಭದಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಮುಂದಿಟ್ಟುಕೊಂಡು ಚುನಾವಣಾ ನೀತಿಯನ್ನು ಉಲ್ಲಂಘಿಸುತ್ತಿರುವ ತಮಿಳುನಾಡು ಸರ್ಕಾರವನ್ನು ವಜಾಗೊಳಿಸಿ, ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು. ತಮಿಳುನಾಡು ಸರ್ಕಾರದ ಧೋರಣೆಯನ್ನು ಚುನಾವಣಾ ಆಯೋಗಕ್ಕೆ ತಿಳಿಸಿ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಪುರುಷೋತ್ತಮ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕುಮಾರ್, ಶ್ರೀಗಂಧ ಕನ್ನಡ ಯುವವೇದಿಕೆ ಅಧ್ಯಕ್ಷ ರವಿಚಂದ್ರಪ್ರಸಾದ್ ಕಹಳೆ ಇದ್ದರು.