ಪ್ರತಿನಿಧಿ ವರದಿ ಯಳಂದೂರು
ತಾಲೂಕಿನ ಕಂದಹಳ್ಳಿ ಗ್ರಾಮದ ಮಹೇಶ್ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆ.ಆರ್.ಎಸ್) ಚಾ.ನಗರ ಮೀಸಲು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಇದರ ಬಗ್ಗೆ ಕೆ.ಆರ್.ಎಸ್. ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಅಧಿಕೃತವಾಗಿ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಂದಹಳ್ಳಿ ಮಹೇಶ್ ಹೆಸರನ್ನು ಘೋಷಣೆ ಮಾಡಿದ್ದಾರೆ.
ಕೆಆರ್ಎಸ್ ಪಕ್ಷದ ಅಭ್ಯರ್ಥಿ ಕಂದಹಳ್ಳಿ ಮಹೇಶ್ ಮಾತನಾಡಿ ನಾನು ಈ ಹಿಂದೆ ಗ್ರಾಮ ಪಂಚಾಯಿತಿ ಸದಸ್ಯನಾಗಿ ಆಯ್ಕೆಯಾಗಿ ಕೆಲಸ ಮಾಡಿದ ಅನುಭವವಿದೆ ಜತೆಗೆ ಸಾಮಾಜಿಕ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಕಳೆದ ಬಾರಿ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ನನಗೆ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕರು ಪರಿಚಿತರಾಗಿದ್ದಾರೆ. ಜತೆಗೆ ಕೆಆರ್ಎಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಈ ಪಕ್ಷಕ್ಕೆ ಸೇರ್ಪಡೆಗೊಂಡ ನನಗೆ ಪಕ್ಷದ ವರಿಷ್ಠರು ಈ ಬಾರಿ ಲೋಕಸಭಾ ಚುನಾವಣೆಯ ಟಿಕೆಟ್ ನೀಡಿದ್ದಾರೆ. ಕ್ಷೇತ್ರದ ಉದ್ದಗಲಕ್ಕೂ ಸಂಚಾರ ಮಾಡಿ ಮತದಾರರಲ್ಲಿ ನನಗೆ ಒಂದು ಅವಕಾಶ ಕೊಡಿ ಎಂದು ಬೇಡಿಕೊಳ್ಳುತ್ತೇನೆ ಎಂದು ತಿಳಿಸಿದರು.