ಮಂಡ್ಯ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆಯೊಡ್ಡುವುದಾಗಿ ಅಂಗಪಕ್ಷವಾಗಿರುವ ಡಿ.ಎಂ.ಕೆ. ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.
ನಮ್ಮ ನೀರು ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡಿ ಮೇಕೆದಾಟು ಅಣೆಕಟ್ಟನ್ನು ಕಟ್ಟಿಯೇ ತೀರುತ್ತೇವೆ ಎಂದು ದೃಢ ನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ಣಯಕ್ಕೆ ಮನ್ನಣೆ ಇಲ್ಲವೇ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.
ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಸರ್ಕಾರ ಮೀಸಲಿಟ್ಟಿರುವ ಹಣವೆಷ್ಟು, ಸಕ್ಷಮ ಪ್ರಾಧಿಕಾರದಿಂದ ನಿರಪೇಕ್ಷಣಾ ಪತ್ರ ಪಡೆಯುವಲ್ಲಿ ಸರ್ಕಾರದ ಪ್ರಯತ್ನ ಎಂದು ಪ್ರಶ್ನಿಸಿರುವ ಅವರು, ನ್ಯಾಯಾಲಯದ ಆದೇಶವಿದ್ದರೂ ತಮಿಳುನಾಡು ಕೇಳಿದ್ದಕ್ಕಿಂತಲೂ ಹೆಚ್ಚಿಗೆ ನೀರು ಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ಧ ಎಂದು ಉದ್ದುದ್ದ ಭಾಷಣ ಬಿಗಿದು ಅಧಿಕಾರಕ್ಕೇರಿದ ನೀವು ಅಧಿಕಾರ ಹಿಡಿದು ಎಂಟು ತಿಂಗಳಾದರೂ ಈವರೆವಿಗೂ ಅಣೆಕಟ್ಟೆ ಬಗ್ಗೆ ಮೌನ ವಹಿಸಿರುವುದಾದರೂ ಏಕೆ ಎಂದು ಪ್ರಶ್ನಿಸಿದ ಅವರು, ಎರಡೂ ರಾಜ್ಯಗಳು ಕುಳಿತ ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.
ತಮಿಳುನಾಡಿನಲ್ಲಿ ವೈಗೈ ಗುಂಡಾಲ್ ನದಿ ಜೋಡಣೆ, ಹೊಸ ನಾಲೆಗಳ ಮೂಲಕ ನೀರಾವರಿ ಭೂಮಿ ಹೆಚ್ಚಿಸಿಕೊಳ್ಳುತ್ತಿದ್ದರೂ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವರು ಮೌನವಾಗಿದ್ದಾರೆ. ಇಂಡಿಯಾ ಮೈತ್ರಿಕೂಟಕ್ಕೆ ಧಕ್ಕೆಯಾಗುವುದೆಂಬ ಕಾರಣಕ್ಕೆ ಡಿ.ಎಂ.ಕೆ. ಸ್ಟಾಲಿನ್ ಅವರ ನಿರ್ಧಾರಕ್ಕೆ ಪರೋಕ್ಷವಾಗಿ ಬೆಂಬಲ ನೀಡು ರಾಜ್ಯ ಸರ್ಕಾರ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಕೈಗಾರಿಕೆಗಳಿಗೆ ನೀರಿಲ್ಲ. ಬೇಸಿಗೆಲ್ಲಿ ಬೆಂಕಿ ಅವಘಡ ಸಂಭವಿಸಿದೂರ ನಂದಿಸಲು ಅಗ್ನಿಶಾಮಕದಳದ ಟ್ಯಾಂಕರ್ಗಳಲ್ಲಿ ನೀರಿಲ್ಲ. ಜಾನುವಾರುಗಳಿಗೆ ಮೇವಿಲ್ಲ, ಕೆರೆ-ಕಟ್ಟೆ ಖಾಲಿಯಾಗಿವೆ. ರೈತರ ಬೆಳೆಗಳಿಗೆ ನೀರಿಲ್ಲದ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ.
Leave a comment