ಜನರ ಪ್ರತಿನಿಧಿಯಾಗಿ ಸೇವೆ ಮಾಡುವ ಮೂಲಕ ಸಮಾಜದ ಪರಿಸ್ಥಿತಿ ಬದಲಿಸುವ ಉದ್ದೇಶದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದರು.
ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಿವೇದಿತಾ ನಗರದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ 10 ದಿನಗಳು ಕಳೆದಿದ್ದು, ಎಲ್ಲರು ಉತ್ಸಾಹದಿಂದ ನನಗೆ ಸ್ಪೂರ್ತಿ ನೀಡುತ್ತಿದ್ದಾರೆ. ನಾನು ರಾಜಕೀಯಕ್ಕೆ ಬರಬೇಕೆಂದು ಒಂದು ವರ್ಷದಿಂದ ಹಿಂದೆಯೇ ಚಿಂತನೆ ನಡೆಸಿದ್ದೆ, ಕಳೆದ ಒಂಭತ್ತು ವರ್ಷದಲ್ಲಿ ನಾನು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಮಾಜಮುಖಿ ಕಾರ್ಯಗಳಲ್ಲಿ ತೊಡಗುತ್ತಿದ್ದೆ. ಆದರೆ ನಿಜವಾದ ಬದಲಾವಣೆ ಹಾಗೂ ಜನರ ಸೇವೆ ಮಾಡಲು ಸೂಕ್ತ ರೀತಿಯಲ್ಲಿ ಮಾಡಬೇಕೆಂಬ ಕಾರಣದಿಂದ ರಾಜಕೀಯಕ್ಕೆ ಬಂದಿದ್ದೇನೆ ಎಂದು ಹೇಳಿದರು.
ಮೈಸೂರು ಅರಸರು ಸಮಾಜದ ಪರಿಸ್ಥಿತಿ ಉತ್ತಮಗೊಳಿಸುವ ನಿಟ್ಟಿನಲ್ಲಿ ಮೀಸಲಾತಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತರಲಾಯಿತು. ಅದೇ ರೀತಿಯಲ್ಲಿ ಕೇಂದ್ರ ಸರ್ಕಾರದ ಹಲವು ಜನಪರ ಯೋಜನೆಗಳ ಮೂಲಕ ಜನರ ಒಳಿತಿಗಾಗಿ ಶ್ರಮಿಸುತ್ತಿದೆ. ಅದರ ಜೊತೆಗೆ ಪರಂಪರೆಯ ರಕ್ಷಣೆ, ಭಾರತೀಯ ಮೂಲ ಆಕಾಂಕ್ಷೆಯನ್ನು ಉಳಿಸುವ ನಿಟ್ಟಿನಲ್ಲಿ ಮೋದಿ ಅವರ ಸರ್ಕಾರ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ರಾಜಕೀಯಕ್ಕೆ ಬಂದು ಬದಲಾವಣೆಗೆ ಸ್ಪೂರ್ತಿ ನೀಡಿದ್ದು, ವಿಕಸಿತ ಭಾರತಕ್ಕಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡೋಣ ಎಂದರು.
ಇದಕ್ಕೂ ಮುನ್ನ ಕಾರ್ಯಕರ್ತರ ಸಭೆಗೆ ಆಗಮಿಸಿದ ಯದುವೀರ್ ಅವರಿಗೆ ಮಹಿಳೆಯರು ಆರತಿ ಬೆಳಗಿ, ಪೂರ್ಣಕುಂಭ ಸ್ವಾಗತ ಕೋರಿದರು. ಸಭೆಯಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ, ನಗರಾಧ್ಯಕ್ಷ ಎಲ್. ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಧ್ಯಕ್ಷೆ ಮಂಜುಳ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಮಾಜಿ ಮೇಯರ್ ಶಿವಕುಮಾರ್ ಇತರರಿದ್ದರು.