ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹಗಿಂತಲೂ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಹೇಳಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಮೈಸೂರಿನ ಆಳರಸರು ಅಪಾರ ಕೊಡುಗೆ ನೀಡಿದ್ದಾರೆ. ಆಳರಸರ ದೂರದೃಷ್ಟಿಯ ಫಲವಾಗಿ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಮೈಸೂರಿನ ಮಹಾರಾಜರು ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಇದೆಲ್ಲವನ್ನೂ ಪರಿಗಣಿಸಿ ರಾಜಮನೆತನದ ಯದುವೀರ್ ಗೆ ಬಿಜೆಪಿ ಟಿಕೆಟ್ ನೀಡಿದ್ದೇವೆ ಎಂದರು. ಇದೇ ವೇಳೆ ಕಾಂಗ್ರೆಸ್ ನವರು ಮಹಾರಾಜ ಹಾಗೂ ಸಾಮಾನ್ಯ ಅಭ್ಯರ್ಥಿ ನಡುವಿನ ಚುನಾವಣೆ ಎನ್ನುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಅಭ್ಯರ್ಥಿ ಕೂಡ ಜನಸಾಮಾನ್ಯ.ನಮ್ಮ ಅಭ್ಯರ್ಥಿ ಜನಸಾಮಾನ್ಯರ ಜೊತೆಯೇ ಇದ್ದಾರೆ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಮಹಾರಾಜರು. ಆ ಮಹಾರಾಜರ ವಿರುದ್ದ ನಮ್ಮ ಸಾಮಾನ್ಯ ಅಭ್ಯರ್ಥಿ ಹೋರಾಡುತ್ತಿದ್ದಾರೆ. ಟಿಕೆಟ್ ಸಿಗದೇ ಬಂಡಾಯದ ಬಾವುಟ ಹಾರಿಸಿರುವ ಹಿರಿಯ ನಾಯಕರ ಮನವೊಲಿಕೆ ಕಾರ್ಯ ಮುಂದುವರಿದಿದೆ. ಎಲ್ಲವೂ ಸರಿಹೋಗಲಿದೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಲ್ಲೂ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.