ಮೈಸೂರು: ಮಂಡ್ಯ ಸಂಸದೆ ಸುಮಲತಾಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ ವಿಚಾರಕ್ಕೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಜೊತೆ ಮೈತ್ರಿ ಏರ್ಪಟ್ಟ ಕಾರಣ ಸುಮಲತಾಗೆ ಬಿಜೆಪಿ ಟಿಕೆಟ್ ನೀಡಲಾಗಲಿಲ್ಲ. ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಟ್ಟಿದ್ದೇವೆ. ಹಾಗಾಗಿ ಸುಮಲತಾಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಸುಮಲತಾ ಜೊತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಷಾ ಮಾತನಾಡಿದ್ದಾರೆ. ಸುಮಲತಾಗೆ ಮುಂದಿನ ದಿನಗಳಲ್ಲಿ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ.ಸುಮಲತಾ ನಮ್ಮ ಜೊತೆಯಲ್ಲೇ ಇರುತ್ತಾರೆ. ಕಳೆದ ಐದು ವರ್ಷ ಅವರು ನಮ್ಮ ಜೊತೆಯೇ ಇದ್ದರು, ಮುಂದಿನ ಐದು ವರ್ಷವೂ ನಮ್ಮ ಜೊತೆಯಲ್ಲೇ ಇರುತ್ತಾರೆ. ಚುನಾವಣಾ ಪ್ರಚಾರ ಮಾಡುವ ವಿಚಾರದಲ್ಲಿ ಜೆಡಿಎಸ್ ನಾಯಕರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಇದೀಗ ಸೀಟು ಹಂಚಿಕೆ ಅಂತಿಮಗೊಂಡಿದೆ. ಮುಂದೆ ನಡೆಯುವ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ಜೆಡಿಎಸ್ ನ ಪ್ರಮುಖ ನಾಯಕರು ಒಟ್ಟಿಗೆ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.