ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಜೆಪಿ ಬಿಟ್ಟುಕೊಟ್ಟಿರುವ ಬೆನ್ನಲ್ಲೇ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿಗೆ ಹೊಸ ಸವಾಲು ಎದುರಾಗಿದೆ. ಹೆಚ್ ಡಿ ಕೆ ಮಂಡ್ಯದಿಂದ ಲೋಕಸಭೆ ಅಖಾಡಕ್ಕೆ ಇಳಿಯಬೇಕು ಎಂದು ಮಂಡ್ಯದ ಕಾರ್ಯಕರ್ತರು ಒತ್ತಾಯಿಸಿದರೆ, ಸ್ಪರ್ಧಿಸಬಾರದು ಎಂದು ಚನ್ನಪಟ್ಟಣ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಬೆಂಗಳೂರಿನ ಜೆಪಿ ನಗರ ನಿವಾಸದ ಬಳಿ ಭಾನುವಾರ ಬಂದಿದ್ದ ಮಂಡ್ಯ ಜಿಲ್ಲೆಯ ಬೆಂಬಲಿಗರು ಹೆಚ್.ಡಿ.ಕೆ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ವೇಳೆ, ಮಂಡ್ಯ ಬೆಂಬಲಿಗರನ್ನ ಸಮಾಧಾನಪಡಿಸಿದ್ದ ಕುಮಾರಸ್ವಾಮಿ, ಚನ್ನಪಟ್ಟಣ ಮುಖಂಡರನ್ನು ಸಂಪರ್ಕಿಸಿ ನಿರ್ಧಾರ ತಿಳಿಸುವುದಾಗಿ ಹೇಳಿದ್ದರು. ಆದರೆ, ಮಂಡ್ಯದಲ್ಲಿ ಕುಮಾರಸ್ವಾಮಿ ಸ್ಪರ್ಧೆಗೆ ಚನ್ನಪಟ್ಟಣ ಕಾರ್ಯಕರ್ತರು, ಮುಖಂಡರು ವಿರೋಧಿಸಿದ್ದಾರೆ. ಹೀಗಾಗಿ ಎಲ್ಲಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಕುಮಾರಸ್ವಾಮಿಗೆ ತಲೆನೋವು ಆರಂಭವಾಗಿದೆ.