ಕೋಲಾರ : ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಮ್ಮ ಅಳಿಯನಿಗೆ ಟಿಕೆಟ್ ನೀಡುವಂತೆ ಪಟ್ಟುಹಿಡಿದಿದ್ದಾರೆ. ಮತ್ತೊಂದೆಡೆ ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ರಾಜೀನಾಮೆ ನೀಡುವುದಾಗಿ ಐವರು ಶಾಸಕರು ಬೆದರಿಕೆ ಹಾಕಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿ ಟಿಕೆಟ್ ಆಕಾಂಕ್ಷಿ ಎಲ್.ಹನುಮಂತಯ್ಯ ಜೊತೆ ಮಾತುಕತೆ ನಡೆಸಿದರೂ ಭಿನ್ನಮತ ಶಮನಗೊಂಡಿಲ್ಲ. ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯೇ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದು ಕಾಂಗ್ರೆಸ್ಗೆ ಶಾಕ್ ನೀಡಿದೆ.
ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಿಕ್ಕಟ್ಟು ತಾರಕಕ್ಕೇರಿದೆ. ಮುನಿಯಪ್ಪ ಅಳಿಯನಿಗೆ ಟಿಕೆಟ್ ನೀಡುವುದನ್ನು ಖಂಡಿಸಿ ಕೋಲಾರ ಭಾಗದ ಶಾಸಕರು, ಸಚಿವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದರ ಜೊತೆಗೆ ಈಗ MLC ಸ್ಥಾನಕ್ಕೆ ರಾಜೀನಾಮೆ ನೀಡಲು ಸ್ವತಃ ಸಿಎಂ ರಾಜಕೀಯ ಕಾರ್ಯದರ್ಶಿ ಆಗಿರುವ ನಜೀರ್ ಅಹ್ಮದ್ ನಿರ್ಧಾರ ಮಾಡಿದ್ದಾರೆ. ಕೋಲಾರ ಬಣ ರಾಜಕೀಯ ತಡೆಯುವಲ್ಲಿ ಸಿಎಂ, ಡಿಸಿಎಂ ವಿಫಲರಾಗಿದ್ದಾರೆ. ಕೋಲಾರ ನಾಯಕರ ಪ್ರತಿಷ್ಠೆ ಮುಂದೆ ಸ್ವತಃ ಸಿಎಂ, ಡಿಸಿಎಂ ಫೇಲ್ ಆಗಿದ್ದಾರೆ. ಸಿಎಂ ಅತ್ಯಾಪ್ತರಾಗಿರುವ ಬಹುತೇಕ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.