ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅಭಿಪ್ರಾಯ
ಪ್ರತಿನಿಧಿ ವರದಿ ಮಡಿಕೇರಿ
ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಿ ಶಾಲೆಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತಂದುಕೊಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ತಿಳಿಸಿದರು
ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಬೆಳ್ಳಿ ಮಹೋತ್ಸವದ ಪ್ರಯುಕ್ತ ಎರಡನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶಾಲೆಗೆ ತನ್ನದೇ ಆದ ಇತಿಹಾಸವಿದೆ. ಇಲ್ಲಿ ವ್ಯಾಸಂಗ ಮಾಡಿದ ಮಕ್ಕಳು ಉನ್ನತ ಸ್ಥಾನಗಳಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಶಾಲೆಯಲ್ಲಿ ಜನರಲ್ ತಿಮ್ಮಯ್ಯ ಅವರ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ವೀರಾಸೇನಾನಿಗೆ ಗೌರವ ಸೂಚಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಿ ಜೀವನ ನಡೆಸಲು ಶಿಕ್ಷಕರು ಹಾಗೂ ಶಾಲೆಯ ಆಡಳಿತ ಮಂಡಳಿ ಉತ್ತಮ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ಹೇಳಿದರು.
ಇಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಇಂದು ದೇಶ ವಿದೇಶದಲ್ಲಿ ಉತ್ತಮ ಹುದ್ದೆಗಳನ್ನು ಅಲಂಕರಿಸಿದ್ದಾರೆ. ನಮ್ಮ ದೇಶದ ಉತ್ತಮ ಪ್ರಜೆಗಳಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಇದು ಉತ್ತಮ ಭವಿಷ್ಯ ರೂಪಿಸುವ ದೇಗುಲವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸನ್ನು ಸಾಧಿಸಿ ಎಂದು ಎಂದರು.
ಮೈಸೂರಿನ ಎಸ್ಬಿಆರ್ಆರ್ ಮಹಾಜನ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥ ಕೊಡಂದೇರ ಹರೀಶ್ ಮಾಚಯ್ಯ ಮಾತನಾಡಿ, ಜನರಲ್ ತಿಮ್ಮಯ್ಯ ಒಬ್ಬ ಪರಿಪೂರ್ಣ ವ್ಯಕ್ತಿಯಾಗಿದ್ದು, ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ. ಅವರೊಬ್ಬರು ಸಜ್ಜನ ಸೇನಾನಿ, ಅವರ ಹೆಸರಿನಲ್ಲಿ ನಡೆಯುತ್ತಿರುವ ಜನರಲ್ ತಿಮ್ಮಯ್ಯ ಶಾಲೆಯು ಮಾದರಿ ಶಿಕ್ಷಣ ಸಂಸ್ಥೆಯಾಗಿ 25 ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ವಿಚಾರ ಎಂದರು.
ಶಾಲಾ ಆಡಳಿತ ಮಂಡಳಿಯ ಕರೆಸ್ಪಾಂಡೆಂಟ್ ಕನ್ನಂಡ ಕವಿತ ಬೊಳ್ಳಪ್ಪ ಮಾತನಾಡಿ, ಶಾಲೆಯು ಎಲ್ಲಾ ವಿಷಯದಲ್ಲೂ ಮಾದರಿಯಾಗಿದೆ. ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚು ಕಾಲಕಳೆಯುವ ಮೂಲಕ ಅವರ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು ಮತ್ತು ಶಿಕ್ಷಕರು ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಉತ್ತಮ ವೇದಿಕೆ ಕಲ್ಪಿಸಬೇಕು ಎಂದು ತಿಳಿಸಿದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಮಂಡುವಂಡ ಪಿ.ಮುತ್ತಪ್ಪ, ಕಾರ್ಯ ನಿರ್ವಾಹಕ ಮುಕ್ಕಾಟಿರ ಪೊನ್ನಮ್ಮ ಮೊಣ್ಣಪ್ಪ, ಸದಸ್ಯರಾದ ನಂದಿನೆರವಂಡ ಎಂ.ದಿನೇಶ್, ಕೇಕಡ ಎ.ದೇವಯ್ಯ, ಮಂಡೀರ ಎಂ.ಮುದ್ದಪ್ಪ, ಮೂವೇರ ಕೆ.ಜಯರಾಮ್, ಬೊಪ್ಪಂಡ ಸರಳ ಕರುಂಬಯ್ಯ, ಕಾಂಡೇರ ಲಲ್ಲು ಕುಟ್ಟಪ್ಪ, ಶಿಕ್ಷಣ ತಜ್ಞರಾದ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಚೌರೀರ ಕಾವೇರಿ ಪೂವಯ್ಯ, ಶಾಲೆಯ ಪ್ರಾಂಶುಪಾಲೆ ಕಲ್ಮಾಡಂಡ ಸರಸ್ವತಿ ಸುಬ್ಬಯ್ಯ ಮತ್ತಿತರರು ಉಪಸ್ಥಿತರಿದ್ದರು.
ಕೊಡವ ಸಮಾಜ ಮತ್ತು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅಧ್ಯಕ್ಷತೆಯಲ್ಲಿ ಭಾನುವಾರ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಮೇರಿಯಂಡ ನಾಣಯ್ಯ, ಕಾಫಿ ಬೆಳೆಗಾರ ಹಾಗೂ ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ನಡಿಕೇರಿಯಂಡ ಬೋಸ್ ಮಂದಣ್ಣ ಪಾಲ್ಗೊಂಡಿದ್ದರು.