ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ(Rahul Gandhi) ಅವರು 2024ರ ಲೋಕಸಭೆ ಚುನಾವಣೆಗೆ ಇಂದು(ಬುಧವಾರ) ವಯನಾಡಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಮತ್ತೆ ಅದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ವಯನಾಡ್ನಲ್ಲಿ ರೋಡ್ ಶೋ ನಡೆಸಿ ಸಂಜೆಯ ವೇಳೆಗೆ ದೆಹಲಿಗೆ ಹಿಂದಿರುಗಲಿದ್ದಾರೆ.
ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಅವರು ಈ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಪತ್ನಿ ಮತ್ತು ಸಿಪಿಐ ಅಭ್ಯರ್ಥಿ ಅನ್ನಿ ರಾಜಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಮೂವರ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಡಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಕೇರಳದಲ್ಲಿ ಎರಡನೇ ಹಂತದ ಚುನಾವಣೆಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಅಂದಹಾಗೆ, 2019ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಹುಲ್ ಗಾಂಧಿ 4.31 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.