ಚಾಮರಾಜನಗರ: ಬಿಜೆಪಿ-ಜೆಡಿಎಸ್ ಮೈತ್ರಿಯಾದ ಬಳಿಕ ಕಾಂಗ್ರೆಸ್ ಬ್ಯಾಟರಿ ಡೌನ್ ಆಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ಗಾಬರಿಯಾಗಿ ಉಸಿರಾಡಲು ಕಷ್ಟ ಪಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಬರಗಾಲ ಆವರಿಸುತ್ತದೆ. ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ್ದ ವೇಳೆ ಕೆರೆ-ಕಟ್ಟೆಗಳು ಕೋಡಿ ಬಿದ್ದು ಪ್ರವಾಹ ಸ್ಥಿತಿ ಎದುರಾಗಿತ್ತು. ಜನರು ಕಾಂಗ್ರೆಸ್ ವಿರುದ್ಧ ಶಾಪ ಹಾಕುತ್ತಿದ್ದಾರೆ. ರಾಜ್ಯದಲ್ಲಿ 800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯ ಸರ್ಕಾರಕ್ಕೆ ಕರುಣೆಯೇ ಇಲ್ಲ ಎಂದು ಟೀಕಿಸಿದರು. ರೈತರ ಸಮಸ್ಯೆ ಪರಿಹರಿಸುವ ಬದಲು ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ.
ಕೇಂದ್ರದ ಅನುದಾನದ ವಿಚಾರವಾಗಿ ಅಮಿತ್ ಶಾ ವಿರುದ್ಧ ಸಿಎಂ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ. ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ 1 ಲಕ್ಷ ಕೋಟಿ ಅನುದಾನ ಬಂದಿದ್ದರೆ, ಕಳೆದ 10 ವರ್ಷದಲ್ಲಿ 4 ಲಕ್ಷ ಕೋಟಿಗೂ ಅಧಿಕ ಅನುದಾನ ಬಂದಿದೆ ಎಂದರು. ರಾಜ್ಯದಲ್ಲಿ ಕಳೆದ 10 ತಿಂಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಶೂನ್ಯ. ಹೀಗಾಗಿ, ಈ ಸರ್ಕಾರಕ್ಕೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಬೇಕು. ಬಾಲರಾಜ್ ಅವರನ್ನು 1 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಮಾಡಬೇಕು ಎಂದು ಮನವಿ ಮಾಡಿದರು.