ಮೈಸೂರು: ನಗರದ ದೇವರಾಜ ಮಾರುಕಟ್ಟೆಯಲ್ಲಿ ಇಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಅವರ ಸಮ್ಮುಖದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಣಾಳಿಕೆಯನ್ನು ನೀಡುವ ಮೂಲಕ ಮತ ಯಾಚನೆ ಮಾಡಿದರು.
ಮಾರುಕಟ್ಟೆಯ ಪ್ರತಿ ಮಳಿಗೆಗಳಿಗೂ ಭೇಟಿ ನೀಡಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ತಿಳಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ವಿನಂತಿ ಮಾಡಿಕೊಂಡರು.
ದೇವರಾಜ ಮಾರುಕಟ್ಟೆಯ ವರ್ತಕರ ಸಂಘದ ಅಧ್ಯಕ್ಷ ಮಹದೇವ್ ಅವರು ಶಾಸಕ ಕೆ.ಹರೀಶ್ ಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಸನ್ಮಾನಿಸಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಸಂಪೂರ್ಣ ಬೆಂಬಲ ಕೊಡುವುದಾಗಿ ಆಶ್ವಾಸನೆ ನೀಡಿದರು. ಮಾರುಕಟ್ಟೆಯ ಪ್ರಮುಖ ಮುಖಂಡರಾದ ಹೇಮಣ್ಣ ಸೇರಿದಂತೆ ಇತರರನ್ನು ಭೇಟಿ ಮಾಡಿ ಹೆಚ್ಚಿನ ಬೆಂಬಲ ನೀಡುವಂತೆ ತಿಳಿಸಿದರು.
ದೇವರಾಜ ಮಾರುಕಟ್ಟೆಯ ಅಂಗಡಿಯ ಮಾಲೀಕರು, ವ್ಯಾಪಾರಿಗಳು ಹಾಗೂ ಸಿಬ್ಬಂದಿಗಳು ಐದು ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ನಾವು ಪಡೆದುಕೊಳ್ಳುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಕಾರ್ಯಕ್ರಮಗಳನ್ನು ಒಪ್ಪಿಕೊಂಡಿದ್ದೇವೆ ಹಾಗಾಗಿ ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಬೆಂಬಲಿಸಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.