ಚಾಮರಾಜನಗರ: ಚಾಮರಾಜನಗರ ಎಸ್ಸಿ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ಮಾಡಲಾಗಿದ್ದು, ಮೂವರ ನಾಮಪತ್ರ ತಿರಸ್ಕೃತಗೊಂಡಿವೆ. ಇನ್ನು 22 ಅಭ್ಯರ್ಥಿಗಳದ್ದು ಕ್ರಮಬದ್ಧವಾಗಿವೆ ಎಂದು ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ಮಾಹಿತಿ ನೀಡಿದ್ದಾರೆ. ಇನ್ನು ಮುಖ್ಯವಾಗಿ ಕಾಂಗ್ರೆಸ್ ಅಭ್ಯರ್ಥಿ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರ ನಾಮಪತ್ರವೂ ಸಹ ಕ್ರಮಬದ್ಧವಾಗಿದೆ. ಸುನೀಲ್ ಬೋಸ್ ಅವರು ತಮ್ಮ ನಾಮಪತ್ರದಲ್ಲಿ ಸರಿಯಾದ ಮಾಹಿತಿ ನೀಡಿಲ್ಲ. ಹೀಗಾಗಿ ಅವರ ಉಮೇದುವಾರಿಕೆ ತಿರಸ್ಕೃತಗೊಳಿಸಬೇಕೆಂದು ಬಿಜೆಪಿ ದೂರು ನೀಡಿತ್ತು. ಆದ್ರೆ, ಚುನಾವಣಾಧಿಕಾರಿ ಎಲ್ಲಾ ಪರಿಶೀಲನೆ ನಡೆಸಿದ್ದು, ಎಲ್ಲವೂ ಸರಿಯಾಗಿದೆ ಎಂದು ಸುನೀಲ್ ಬೋಸ್ ಅವರ ನಾಮಪತ್ರವನ್ನು ಅಂಗೀಕರಿಸಿದ್ದಾರೆ.
ಸಮಾಜವಾದಿ ಪಕ್ಷದ ಚಾಮದಾಸ್, ಪಕ್ಷೇತರ ಅಭ್ಯರ್ಥಿಗಳಾದ ಗುರುಲಿಂಗಯ್ಯ ಮತ್ತು ಸಿ.ರಾಜು ಅವರ ನಾಮಪತ್ರ ತಿರಸ್ಕೃತವಾಗಿದೆ. ಇನ್ನುಳಿದಂತೆ ಬಿಜೆಪಿ ಅಭ್ಯರ್ಥಿ ಬಾಲರಾಜು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಸೇರಿದಂತೆ ಒಟ್ಟು 22 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಆರೋಪವೇನಾಗಿತ್ತು?
ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ತಮ್ಮ ನಾಮಪತ್ರದಲ್ಲಿ ಹೆಂಡತಿ, ಮಕ್ಕಳ, ಕುಟುಂಬದ ಮಾಹಿತಿ ಮುಚ್ಚಿಟ್ಟಿದ್ದಾರೆ. ಅಲ್ಲದೇ ಪತ್ನಿ, ಮಕ್ಕಳು, ತಂದೆ-ತಾಯಿ ಆಸ್ತಿ ವಿವರ ಘೋಷಿಸಿಲ್ಲ. ಹೀಗಾಗಿ ಸುನೀಲ್ ಬೋಸ್ ಅವರ ನಾಮಪತ್ರವನ್ನು ಅಸಿಂಧುಗೊಳಿಸುವಂತೆ ಚಾಮರಾಜನಗರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜು ಅವರು ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದರು.