– ವಿಶೇಷ ವೆಚ್ಚ ವೀಕ್ಷಕ ಮುರುಳಿ ಕುಮಾರ್ ಸೂಚನೆ
– ಲೋಕಸಭಾ ಚುನಾವಣೆ ಹಿನ್ನೆಲೆ ಅಧಿಕಾರಿಗಳ ಸಭೆ
ಪ್ರತಿನಿಧಿ ವರದಿ ಮೈಸೂರು
ಲೋಕಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಪ್ರತಿಯೊಂದು ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು ಎಂದು ಕರ್ನಾಟಕ ರಾಜ್ಯಕ್ಕೆ ನೇಮಕವಾಗಿರುವ ವಿಶೇಷ ವೆಚ್ಚ ವೀಕ್ಷಕ ಬಿ. ಮುರುಳಿ ಕುಮಾರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ವಿಧಾನಸಭಾ ಕ್ಷೇತ್ರಗಳು ಸಹಾಯಕ ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ವೆಚ್ಚ ಸಮಿತಿ ಅಧಿಕಾರಿಗಳು ಹಾಗೂ ಸಮಿತಿಗಳ ನೋಡೆಲ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕಿದ್ದು, ಈ ನಿಟ್ಟಿನಲ್ಲಿ ಚೆಕ್ ಪೋಸ್ಟ್ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ ದಾಖಲೆ ರಹಿತ ಹಣ, ಇನ್ನಿತರೆ ವಸ್ತುಗಳು ಸಾಗಾಣಿಕೆ ಆಗದಂತೆ ಎಚ್ಚರವಹಿಸಿ. ಅಲ್ಲದೇ ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ದೂರುಗಳನ್ನು ಸ್ವೀಕರಿಸಿದಾಗ ಅದರ ನೋಂದಣಿ ಮತ್ತು ಅವುಗಳ ಮೇಲೆ ತೆಗೆದುಕೊಂಡ ಕ್ರಮಗಳನ್ನು ಸರಿಯಾಗಿ ನಿರ್ವಹಿಸುವಂತೆ ತಿಳಿಸಿದರು.
ಅಂತೆಯೇ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್ಎಸ್ಟಿ, ಎಸ್ಎಸ್ಟಿ, ವಿವಿಟಿ ಹಾಗೂ ಇನ್ನಿತರ ತಂಡಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಿದೆ. ಆ ಮೂಲಕ ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ನಿಗಾವಹಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣೆ ವೆಚ್ಚವನ್ನು ನಿರ್ವಹಿಸಲು ನೇಮಕ ಆಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದ ಅವರು, ಚುನಾವಣಾ ಅವಧಿಯಲ್ಲಿ ಬ್ಯಾಂಕುಗಳ ಮೂಲಕ ನಡೆಯಬಹುದಾದ ಅನುಮಾನಾಸ್ಪದ ವ್ಯವಹಾರಗಳು, ಹಣ ಪಡೆಯುವ ಬಗ್ಗೆ ಪ್ರತಿನಿತ್ಯ ಮಾಹಿತಿ ಒದಗಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಹುಣಸೂರು, ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕ ಎ. ಸುರೇಶ್, ನಗರ ಪೊಲೀಸ್ ಆಯುಕ್ತ ಬಿ. ರಮೇಶ್, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಚಾಮುಂಡೇಶ್ವರಿ, ಚಾಮರಾಜ, ಕೃಷ್ಣರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಯೊಗೇಶ್ ಮಿಶ್ರ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
=================