– ಗ್ಯಾರಂಟಿಗಳನ್ನೇ ಅಭಿವೃದ್ಧಿ ಎನ್ನುತ್ತಿದೆ ರಾಜ್ಯ ಸರ್ಕಾರ
– ಜೆಡಿಎಸ್ನ ಮಾಜಿ ಶಾಸಕ ಅನ್ನದಾನಿ ಟೀಕೆ
ಪ್ರತಿನಿಧಿ ವರದಿ ಮೈಸೂರು
ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನೇ ಅಭಿವೃದ್ಧಿ ಎಂದು ಬಿಂಬಿಸುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ನ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಅನ್ನದಾನಿ ಟೀಕಿಸಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಕೇವಲ ಗ್ಯಾರಂಟಿ ಹೆಸರು ಹೇಳಿಕೊಂಡು ಆಡಳಿತ ನಡೆಸುತ್ತಿದೆ. ಗ್ಯಾರಂಟಿಗಳೇ ಅಭಿವೃದ್ಧಿ ಎಂದು ಬಿಂಬಿಸುತ್ತಿದ್ದು, ರಾಜ್ಯದ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ. ದಲಿತರಿಗೆ ಮೀಸಲಿಟ್ಟ ೧೧ ಸಾವಿರ ಕೋಟಿ ರೂ.ಗಳನ್ನು ಬೇರೆ ಬೇರೆ ಕಾರಣಗಳಿಗೆ ಮನಸೋಇಚ್ಛೆ ಬಳಸಲಾಗಿದೆ. ಹೀಗಾಗಿ ದಲಿತ ಸಮುದಾಯ ರಾಜ್ಯಕ್ಕೆ ಕೊಡುಗೆ ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ವಂಶಸ್ಥ ಯದುವೀರ್ ಒಡೆಯರ್ ಹಾಗೂ ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿರುವ ಬಾಲರಾಜು ಅವರಿಗೆ ಮತ ನೀಡಬೇಕೆಂದು ಕೋರಿದರು.
ಮಾಜಿ ಶಾಸಕ ಅಶ್ವಿನ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ದಲಿತರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದೆ ಹೊರತು ಅವರಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಬೆಳೆಸಿತು ಎಂದು ಮಾತನಾಡಿದ್ದಾರೆ. ಆದರೆ ಅಂಬೇಡ್ಕರ್ ಕಷ್ಟದಿಂದ ಮೇಲೆ ಬಂದು ದೇಶಕ್ಕೆ ಸಂವಿಧಾನ ನೀಡಿದ ಮಹಾನ್ ನಾಯಕರಾಗಿದ್ದಾರೆ. ಅವರ ಬಗ್ಗೆ ಕೀಳಾಗಿ ಮಾತನಾಡಿರುವುದು ಖಂಡನೀಯ. ಇದೆಲ್ಲವನ್ನು ಮನಗಂಡು ದಲಿತರು, ಹಿಂದುಳಿದವರು ಬಿಜೆಪಿ ಮತ ನೀಡಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ನಗರ ಪಾಲಿಕೆ ಮಾಜಿ ಸದಸ್ಯ ಎಸ್ಬಿಎಂ ಮಂಜು, ಶಿವಕುಮಾರ್ ಇತರರಿದ್ದರು.
=================
ಬಾಕ್ಸ್
ಸಂವಿಧಾನ ಬದಲಿಸುತ್ತೇವೆ ಎಂದಿದ್ದೇ ಕಾರಣ
ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದಿದ್ದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದೆ ಎಂದು ಮಾಜಿ ಶಾಸಕ ಡಾ ಅನ್ನದಾನಿ ಹೇಳಿದರು. ಅನಂತ್ ಕುಮಾರ್ ಹೆಗಡೆ ಅವರು ಯಾವುದೋ ಸನ್ನಿವೇಶದಲ್ಲಿ ಹೇಳಿಕೆ ನೀಡಿದ್ದು, ಈ ಹೇಳಿಕೆಯಿಂದಲೇ ಅವರಿಗೆ ಟಿಕೆಟ್ ಕೈ ತಪ್ಪಿದೆ. ಸಂವಿಧಾನವನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ ಮತ್ತು ಬದಲಾವಣೆ ಮಾಡುವ ತಾಕತ್ತು ಯಾರಿಗೂ ಇಲ್ಲ. ಆದರೆ ಕಾಂಗ್ರೆಸ್ಸಿಗರು ಕೇವಲ ಸಂವಿಧಾನ ವಿಚಾರವನ್ನಿಟ್ಟುಕೊಂಡು ಮಾತನಾಡುತ್ತಾರೆ. ಕಾಂಗ್ರೆಸ್ನಿಂದ ಅಂಬೇಡ್ಕರ್ ಅವರಿಗೆ ಅಪಮಾನವಾಗಿದೆ ಎಂದರು.
=================