ಪ್ರತಿನಿಧಿ ವರದಿ ಚಾಮರಾಜನಗರ
ಲೋಕಸಭಾ ಚುನಾವಣೆಯು ಏ.26ರಂದು ನಡೆಯಲಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಿ ಸದೃಢ ಭಾರತ ನಿರ್ಮಾಣಕ್ಕೆ ಸಹಕರಿಸಿ ಎಂದು ನಗರಸಭೆ ಪೌರಾಯುಕ್ತ ರಾಮದಾಸ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ನಗರದ 14ನೇ ವಾರ್ಡ್ ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏ.26ಕ್ಕೆ ಮೊದಲ ಹಂತ, ಮೇ 7ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಪ್ರತಿಯೊಬ್ಬರೂ ಕೂಡಾ ತಮ್ಮ ಮತದಾನ ಹಕ್ಕನ್ನು ಚಲಾಯಿಸಬೇಕು ಎಂದು ಕೋರಿದರು.
ಚುನಾವಣಾ ಪರ್ವ ದೇಶದ ಗರ್ವ ಎಂಬ ಘೋಷವಾಕ್ಯದ ಮೂಲಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮತದಾನದ ಹಬ್ಬ ಏ.26 ರಂದು ನಡೆಯಲಿದೆ. ಎಲ್ಲರೂ ತಪ್ಪದೇ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ತೆರಳಿ ಮತದಾನ ಮೂಲಕ ತಮ್ಮ ಜನಪ್ರತಿನಿಧಿಗಳನ್ನು ತಾವೇ ಆಯ್ಕೆಮಾಡಿಕೊಳ್ಳಬೇಕು ಎಂದು ತಿಳಿಸಿದರು.
ನಗರಸಭೆ ಯೋಜನಾಧಿಕಾರಿ ವೆಂಕಟನಾಯಕ್ ಮಾತನಾಡಿ, ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಕೂಡಾ ಮತದಾನ ನೀಡುವ ಸಮಾನ ಹಕ್ಕನ್ನು ಕೊಟ್ಟಿದೆ. ಎಲ್ಲರೂ ಕೂಡಾ ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಮನವಿ ಮಾಡಿದರು.
ನಗರಸಭಾ ಸಿಆರ್ಪಿಗಳಾದ ನರ್ಗೀಸ್ ಬಾನು, ಜ್ಯೋತಿ ಮಾತನಾಡಿದರು. ಸ್ತ್ರೀ ಶಕ್ತಿ ಸಂಘದ ಸದಸ್ಯರು ವಾರ್ಡ್ನ ಪ್ರಮುಖ ಬೀದಿಗಳಲ್ಲಿ ಮೇಣದಬತ್ತಿ ಮೆರವಣಿಗೆಯ ಮಾಡಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ರಾಮಚಂದ್ರು, ಕಂದಾಯಾಧಿಕಾರಿ ಶರವಣ, ಸಿಆರ್ ಪಿ ರೂಪಾ, ಸಿಬ್ಬಂದಿ ನವೀನ್ ಇತರರಿದ್ದರು.
7 ಸಿಎಚ್ಎನ್.2: ಚಾಮರಾಜನಗರದ 14ನೇ ವಾರ್ಡ್ ನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಜಾಥಾಗೆ ಪೌರಾಯುಕ್ತ ರಾಮದಾಸ್ ಚಾಲನೆ ನೀಡಿದರು.