ಮಡಿಕೇರಿ: ಭಾರತೀಯ ಹವಾಮಾನ ಇಲಾಖೆಯು ಪ್ರಸ್ತುತ ಹಾಗೂ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆ ನೀಡಿದ್ದು, ಶಾಖದ ಹೊಡೆತ ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಲಹೆಗಳನ್ನು ನೀಡಿದೆ. ಶಾಖದ ಹೊಡೆತಕ್ಕೆ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಸಲಹೆಗಳನ್ನು ಪಾಲಿಸಲು ಕೇಳಿಕೊಂಡಿದೆ.
ಸೂಚನೆಗಳು: ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು. (ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ), ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದುಮ, ಮಜ್ಜಿಗೆ, ಎಳನೀರು, ಹಣ್ಣಿನ ರಸ, ಗ್ಲೂಕೋಸ್, ಓಆರ್ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು.
ಸಾರ್ವಜನಿಕರು ಬಿಸಿಲಿನ ದಿನಗಳಲ್ಲಿ ಛತ್ರಿ, ತಂಪು ಕನ್ನಡಕ, ಟವಲ್ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯುವುದು, ತೆಳುವಾದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು, ಬಿಳಿ ಬಣ್ಣದ ಬಟ್ಟೆಗಳ ಬಳಕೆ, ಗಾಳಿಯಾಡುವ ಪಾದರಕ್ಷೆ ಧರಿಸಬೇಕಿದೆ. ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು.
ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಕುಡಿಯಬೇಕಿದೆ. ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು, ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಬಾತ್ ಮಾಡಬೇಕು ಅಥವಾ ಐಸ್ ಪ್ಯಾಕ್ಗಳನ್ನು ಉಪಯೋಗಿಸಬಹುದು ಸೂಕ್ತ.
ಹೀಟ್ವೇವ್ ಸ್ಟ್ರೋಕ್ ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡು ಬರದಿದ್ದರೆ, ಅವರನ್ನು ಕೂಲಿಂಗ್ ವ್ಯವಸ್ಥೆಯೊಂದಿಗೆ ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಬಿಸಿಲಿನಲ್ಲಿ ಕೆಲಸ ಮಾಡುವವರಿಗೆ ಕಡ್ಡಾಯ ವಿರಾಮವನ್ನು ನಿಗದಿಪಡಿಸಿ, ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬಾರದು.
ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಒಳ್ಳೆಯದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.