ಚಿಕ್ಕಬಳ್ಳಾಪುರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ದಿನವಾದ ಏಪ್ರಿಲ್ 14 ರಂದು ಪ್ರಧಾನಿ ನರೇಂದ್ರ ಮೋದಿ ದೇವನಹಳ್ಳಿಗೆ ಚುನಾವಣಾ ಪ್ರಚಾರಕ್ಕಾಗಿ ಬರಲಿದ್ದಾರೆ ಎಂದು ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಉತ್ತರ ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವಾರು ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಎಲ್ಲ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಬರಬೇಕು ಎಂದು ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗದ ಜನರು ಹಾಗೂ ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಕೇಂದ್ರ ಸರ್ಕಾರದ ಮುದ್ರಾ ಯೋಜನೆಯಡಿ ಬಲಹೀನ ವರ್ಗದವರಿಗೆ ಹೆಚ್ಚು ಅನುಕೂಲ ಕಲ್ಪಿಸಕೊಡಲಾಗಿದೆ. ಯಾವುದೇ ಗ್ಯಾರಂಟಿ ಇಲ್ಲದೆ 10-15 ಲಕ್ಷ ರೂ. ಸಾಲ ನೀಡುತ್ತಿದ್ದು, ಇದು ಸಬಲೀಕರಣದಲ್ಲಿ ವಿಭಿನ್ನವಾದ ಪ್ರಯತ್ನವಾಗಿದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರರಿಗೆ ಸಂಬಂಧಿಸಿದ ಐದು ಸ್ಥಳಗಳನ್ನು ಪಂಚ ತೀರ್ಥ ಎಂದು ಪ್ರಧಾನಿ ಮೋದಿ ಅಭಿವೃದ್ಧಿಪಡಿಸಿದ್ದಾರೆ. ಸಂವಿಧಾನ ದಿನಾಚರಣೆಯನ್ನು ಆಚರಣೆ ಮಾಡಲಾರಂಭಿಸಿದ್ದು ಕೂಡ ಅವರಿಗೆ ನೀಡಿರುವ ಗೌರವ ಎಂದರು.