ಬೆಂಗಳೂರು: ಶೋಭಾ ಕರಂದ್ಲಾಜೆ ಅವರ ಕಾರಿನ ಬಾಗಿಲು ದ್ವಿಚಕ್ರ ವಾಹನಕ್ಕೆ ತಾಗಿ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಪ್ರಕಾಶ್ (60) ಎಂಬುವರು ಮೃತಪಟ್ಟಿದ್ದಾರೆ.
ಕೆ.ಆರ್.ಪುರ ಗಣಪತಿ ದೇವಸ್ಥಾನದ ಬಳಿ ಸೋಮವಾರ ಮಧ್ಯಾಹ್ನ 12.30 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಈ ಸಂಬಂಧ ಕೆ.ಆರ್.ಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರು ಚುನಾವಣಾ ಪ್ರಚಾರ ರ್ಯಾಲಿಗೆಂದು ಕೆ.ಆರ್.ಪುರಕ್ಕೆ ಬಂದಿದ್ದರು. ಅವರ ಕಾರನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಇದೇ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರ ಪ್ರಕಾಶ್ ಹೊರಟಿದ್ದರು.
ಈ ವೇಳೆ ಕಾರಿನ ಚಾಲಕ ದಿಢೀರ್ ಬಾಗಿಲು ತೆರೆದ. ವೇಗವಾಗಿ ಹೊರಟಿದ್ದ ಪ್ರಕಾಶ್ ಅವರ ದ್ವಿಚಕ್ರ ವಾಹನ ಕಾರಿನ ಬಾಗಿಲಿಗೆ ಗುದ್ದಿತು. ಇದರಿಂದಾಗಿ ದ್ವಿಚಕ್ರ ವಾಹನ ಸಮೇತ ಪ್ರಕಾಶ್ ರಸ್ತೆಗೆ ಬಿದ್ದರು. ಇದೇ ಮಾರ್ಗದಲ್ಲಿ ಅತಿ ವೇಗವಾಗಿ ಹೊರಟಿದ್ದ ಖಾಸಗಿ ಬಸ್ಸಿನ ಚಕ್ರ ಪ್ರಕಾಶ್ ಅವರ ಮೇಲೆ ಹರಿಯಿತು ಎಂದು ಪೊಲೀಸ್ ಮೂಲಗಳು ಹೇಳಿವೆ.
ತೀವ್ರ ಗಾಯಗೊಂಡಿದ್ದ ಪ್ರಕಾಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊದ್ದರು. ಅಲ್ಲಿಯೇ ಪ್ರಕಾಶ್ ಮೃತಪಟ್ಟರು.