ಬೆಂಗಳೂರು: ಇದೇ 14ರಂದು ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯ ಭೇಟಿ ಕಾರ್ಯಕ್ರಮದಲ್ಲಿ ಸ್ವಲ್ಪ ಬದಲಾವಣೆ ಆಗಿದ್ದು, ಅಂದು ಅವರು ಮೈಸೂರು ಮತ್ತು ಮಂಗಳೂರಿಗೆ ಮಾತ್ರ ಭೇಟಿ ನೀಡಲಿದ್ದಾರೆ. ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ಕುಮಾರ್ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದ ಅವರು, ಮೈಸೂರಿನಲ್ಲಿ ಅಂದು ಬೃಹತ್ ಸಾರ್ವಜನಿಕ ಸಭೆ ನಡೆಯಲಿದ್ದು, ಇದರಲ್ಲಿ ಮೈಸೂರು- ಕೊಡಗು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಕ್ಷೇತ್ರಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಮಂಗಳೂರಿನಲ್ಲಿ ರೋಡ್ ಶೋ ಮಾತ್ರ ನಡೆಯಲಿದೆ. ಸಾರ್ವಜನಿಕ ಸಭೆ ಇರುವುದಿಲ್ಲ. ಅಂದು ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮೋದಿಯವರ ಸೂಚನೆಯ ಮೇರೆಗೆ ತಮ್ಮ ಕೈಗೆ ಮೆಹಂದಿಯಿಂದ ಕಮಲದ ಗುರುತು ಹಾಕಿಸಿಕೊಂಡು ಬರುವಂತೆ ಮನವಿ ಮಾಡಲಾಗಿದೆ. ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮುಂದಿನ ಸುತ್ತಿನಲ್ಲಿ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.