ಪ್ರತಿನಿಧಿ ವರದಿ ಬೆಟ್ಟದಪುರ
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಸೂಳೇಕೋಟೆ (ಹನುಮಂತಪುರ) ಗ್ರಾಮದಲ್ಲಿ ಗುರುವಾರ ಶ್ರೀ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾಧಿಗಳ ನಡುವೆ ವಿಜೃಂಭಣೆಯಿಂದ ಜರುಗಿತು.
ರಥೋತ್ಸವದ ಪ್ರಯುಕ್ತ ದೇವಾಲಯ ಆವರಣದಲ್ಲಿ ಪಂಚಾಮೃತ ಅಭಿಷೇಕ, ಗಣಪತಿಹೋಮ, ರಾಮತರಕ್ಕಹೋಮ, ಮೂಲಮಂತ್ರ ಹೋಮ ಹಾಗೂ ಸೀತಾ ರಾಘವ ಕಲ್ಯಾಣೋತ್ಸವ ಜರುಗಿದ್ದವು. ನಂತರ ಪಲ್ಲಕ್ಕಿಯಲ್ಲಿ ಶ್ರೀ ಸೀತಾರಾಮ ಸಮೇತ ಶ್ರೀ ಆಂಜನೇಯ ಸ್ವಾಮಿ ದೇವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇವಾಲಯದ ಆವರಣದಲ್ಲಿ ಮೂರು ಸುತ್ತು ಪ್ರದರ್ಶನ ಮಾಡಲಾಯಿತು. ಬಳಿಕ ವಿವಿಧ ಪುಷ್ಪಗಳಿಂದ ಹಾಗೂ ಕೇಸರಿ ಬಾವುಟಗಳಿಂದ ಅಲಂಕೃತಗೊಂಡಿದ್ದ ರಥದಲ್ಲಿ ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಅಕ್ಕಪಕ್ಕದ ಜಿಲ್ಲೆ, ತಾಲೂಕುಗಳಿಂದ ಬಂದಂತ ಭಕ್ತಾಧಿಗಳು ವಿಶೇಷ ಪೂಜೆ ಸಲ್ಲಿಸಿದರು.
ಹಣ್ಣುಜವನ ಎಸೆದು ಭಕ್ತಿ ಸಮರ್ಪಣೆ: ನವದಂಪತಿಗಳು ಹಣ್ಣು ಜವನ ಎಸೆದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ರಥೋತ್ಸವದ ಪ್ರಯುಕ್ತ ಗ್ರಾಮದಲ್ಲಿ ತಳಿರು ತೋರಣಗಳಿಂದ ಸಿಂಗರಿಸಿ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದವು, ಜಾತ್ರಾ ಮಹೋತ್ಸವದ ಪ್ರಯುಕ್ತ ಬಂದಂತ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವೇಳೆ ದೇವಸ್ಥಾನ ಸಮಿತಿಯ ಅಧ್ಯಕ್ಷ ಹೆಚ್. ಶಿಂಗ್ರಿಶೆಟ್ಟಿ, ಕಾರ್ಯದರ್ಶಿ ಎಂ.ಕೆ
ಶಿವರಾಮ ಸೇರಿದಂತೆ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತರು ಇದ್ದರು. ಜಾತ್ರಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಯಿತು. ಜಾತ್ರೆಗೆ ಬಂದಂತಹ ಭಕ್ತರಿಗೆ ದೇವಸ್ಥಾನ ಸಮಿತಿ ಹಾಗೂ ದಾನಿಗಳಿಂದ ಪ್ರಸಾದ ನೀಡಲಾಯಿತು.
11ಬಿಟ್ಟಿಪಿ01: ಬೆಟ್ಟದಪುರ ಸಮೀಪದ ಸೂಳೇಕೋಟೆ (ಹನುಮಂತಪುರ) ಗ್ರಾಮದಲ್ಲಿ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಜರುಗಿತು.