ಮೈಸೂರು: ಭಾನುವಾರ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಾಳೆ 4 ಗಂಟೆಗೆ ನಡೆಯಲಿರುವ ಮೈತ್ರಿ ಸಮಾವೇಶಕ್ಕೆ ಅಂತಿಮ ಹಂತದ ಸಿದ್ಧತೆ ನಡೆದಿದೆ. ಸಮಾವೇಶದಲ್ಲಿ ಒಂದು ಲಕ್ಷ ಜನ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ನೂರಾರು ಕಾರ್ಮಿಕರು ಅಗತ್ಯ ಆಸನಗಳನ್ನು ಹಾಕುತ್ತಿದ್ದಾರೆ. ಇದರ ಜತೆಗೆ ವೇದಿಕೆ ನಿರ್ಮಾಣ ಕಾರ್ಯ ಭಾಗಶಃ ಪೂರ್ಣಗೊಂಡಿದ್ದು, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದಿಂದ ಭದ್ರತಾ ಪರಿಶೀಲನೆ ನಡೆದಿದೆ . ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಕಮಾಂಡೋ ಪೊಲೀಸರು, ನಗರ ಪೊಲೀಸರು, ಸಂಚಾರ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದ್ದು, ಈ ಸಂಬಂಧ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಬಂದು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುತ್ತಿದ್ದಾರೆ.