ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ವಿಶ್ವಾಸ
ಪ್ರತಿನಿಧಿ ವರದಿ ಮಡಿಕೇರಿ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೊಡಗಿನಲ್ಲಿ ಹೆಚ್ಚಿನ ಮತ ಪಡೆಯಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.
ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಗಾಂಧಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿ, ಕೊಡಗಿನ ಎರಡು ವಿಧಾನಸಭಾ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ೧ ಲಕ್ಷಕ್ಕಿಂತ ಹೆಚ್ಚಿನ ಮತ ಪಡೆಯಲಿದ್ದಾರೆಂದರು.
ಕಕ್ಕಬ್ಬೆಯ ೨೦ ಕಿಲೋಮೀಟರ್ ಬೆಟ್ಟಕ್ಕೆ ತೆರಳಿದ್ದು, ಅಲ್ಲಿಯ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿ ತಲುಪಿದೆ. ಮಹಿಳೆಯರಿಗೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗ್ಯಾರಂಟಿ ಯೋಜನೆಯ ಪ್ರಯೋಜನ ಲಭಿಸಿದೆ. ಇಂಥ ಯೋಜನೆ ಜಾರಿಗೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯ ಕಾಂಗ್ರೆಸ್ಸಿಗೆ ಆಧಾರ ಸ್ತಂಭ. ಗ್ಯಾರಂಟಿ ಯೋಜನೆ ಬಗ್ಗೆ ಕಾರ್ಯಕರ್ತರು ಮನೆಮನೆಗೆ ಭೇಟಿ ಮಾಡಿ ಮನವರಿಕೆ ಮಾಡಿಕೊಡುವುದರ ಮೂಲಕ ಮತಯಾಚಿಸಬೇಕೆಂದು ಕರೆ ನೀಡಿದರು.
ಲೋಕಸಭಾ ಚುನಾವಣಾ ಪ್ರಚಾರ ವೇಳೆ ಸಾರ್ವಜನಿಕರು ಗ್ಯಾರಂಟಿ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ನೀಡಿದ ಭರವಸೆಯನ್ನ ಈಡೇರಿಸಿದ್ದೇವೆ. ಚುನಾವಣಾ ಭರವಸೆ ಈಡೇರಿಸಿರುವುದರಿಂದ ನಾವು ಧೈರ್ಯದಿಂದ ಮನೆಮನೆಗೆ ತೆರಳಿ ಮತಯಾಚಿಸಬಹುದು. ಗ್ಯಾರಂಟಿ ಅನುಷ್ಠಾನಕ್ಕೆ ತರದಿದ್ದಲ್ಲಿ ನಮಗೆ ಮತದಾರರಿಗೆ ಮುಖ ತೋರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.
ಗ್ಯಾರಂಟಿ ಯೋಜನೆ ಜಾರಿಗೊಳಿಸಿ, ನುಡಿದಂತೆ ನಡೆದಿದ್ದೇವೆ. ಹೀಗಾಗಿ ರಾಜ್ಯದ ೨೮ ಸ್ಥಾನದ ಪೈಕಿ ೨೨ ಸ್ಥಾನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಕೊಡಗಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅನೇಕ ಅಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ಬಂದಿದೆ. ಬಿಜೆಪಿ ಸುಳ್ಳು ಹೇಳುತ್ತಾ ಬಂದಿದೆ. ಜನರಿಗೆ ಈ ಬಗ್ಗೆ ಮನವರಿಕೆಯಾಗಿದೆ. ಬಿಜೆಪಿ ಹೇಳಿದ್ದ ೧೫ ಲಕ್ಷ ರೂ. ಖಾತೆಗೆ ಹಾಕುವುದು ಜಾರಿಯಾಗಲಿಲ್ಲ ಎಂದು ವ್ಯಂಗ್ಯವಾಡಿದರು.
ನಾವು ಮಾಡಿರುವ ಯೋಜನೆಗಳನ್ನು ತಮ್ಮದೆಂದು ಮಾಜಿ ಶಾಸಕರು ಹೇಳಿಕೊಳ್ಳುತ್ತಿದ್ದಾರೆ. ನಾವು ದ್ವೇಷದ ರಾಜಕೀಯ ಮಾಡುತ್ತಿದ್ದೇವೆ ಎಂದು ಮಾಜಿ ಶಾಸಕರು ಹೇಳಿದ್ದಾರೆ. ಬಿಜೆಪಿಯವರು ದ್ವೇಷದ ರಾಜಕೀಯ ಮಾಡುತ್ತಾ ಬಂದಿದ್ದಾರೆ. ಭೂತದ ಕೈಯಲ್ಲಿ ಭಗವದ್ಗೀತೆ ನೀಡಿದಂತಿದೆ. ಇವರಿಂದ ಕಲಿಯುವುದೇನೂ ಇಲ್ಲ. ಬಿಜೆಪಿ ಸುಳ್ಳು ಹೇಳುತ್ತಾ, ಜಾತಿ- ಧರ್ಮದ ನಡುವಿನ ದ್ವೇಷದ ರಾಜಕೀಯ ಮಾಡುತ್ತಾ ಬಂದಿದೆ. ಕಾಂಗ್ರೆಸ್ ಪ್ರೀತಿಯ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಮಾನವೀಯ ಪ್ರೇಮಿಗಳಾಗಿದ್ದಾರೆಂದು ಬಣ್ಣಿಸಿದರು.
ಕಾಂಗ್ರೆಸ್ಸಿನ ಇಬ್ಬರೂ ಶಾಸಕರು ಜನಪರ ಕೆಲಸ ಮಾಡುತ್ತಿದ್ದೇವೆ. ಮತದಾರರ ಮನೆಗಳಿಗೆ ತೆರಳಿ ಕಾಂಗ್ರೆಸ್ ಕಾರ್ಯಕ್ರಮವನ್ನು ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಜಾತಿ, ಧರ್ಮದಲ್ಲಿ ತಾರತಮ್ಯ ಮಾಡದೇ ಎಲ್ಲರನ್ನೂ ಒಂದಾಗಿ ನೋಡಿ ಕಾಂಗ್ರೆಸ್ ಪರ ಕೆಲಸ ಮಾಡಿ. ಇನ್ನೂ ೪ ವರ್ಷ ೨ ತಿಂಗಳು ನಾವು ಶಾಸಕರಾಗಿರುತ್ತೇವೆ. ಯಾರೂ ಹೆದರುವ ಅಗತ್ಯತೆ ಇಲ್ಲ ಎಂದು ಎ.ಎಸ್. ಪೊನ್ನಣ್ಣ ಹೇಳಿದರು.
=====
ಕೊಡಗಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಹವಾ
ಪ್ರತಿನಿಧಿ ವರದಿ ಮಡಿಕೇರಿ
ಕೊಡಗಿನಲ್ಲಿ ಈಗ ಮೋದಿ ಹವಾ ಇಲ್ಲ. ಕಾಂಗ್ರೆಸ್ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಹವಾ ಇದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಡಿಕೇರಿ, ವಿರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಪಡೆದ ಮತಕ್ಕಿಂತ ಹೆಚ್ಚಿನ ಮತಗಳನ್ನು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಡೆಯಲಿದ್ದಾರೆಂದು ಕಾಂಗ್ರೆಸ್ ವರಿಷ್ಠ ನಾಯಕರಿಗೆ ಭರವಸೆ ನೀಡಿದರು. ೨೫ ವರ್ಷ ಏನೂ ಮಾಡದ ಮಾಜಿ ಶಾಸಕರು ಈಗ ನಮ್ಮ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಜಾತಿ, ಧರ್ಮದ ದ್ವೇಷ ರಾಜಕೀಯ ಮಾಡುತ್ತಾ ಬಂದವರೆಂದು ಟೀಕಿಸಿದರು. ಕೊಡಗಿನ ಜನ ದಡ್ಡರಲ್ಲ. ಬುದ್ಧಿವಂತರಾಗಿದ್ದಾರೆಂದು ಮಂತರ್ ಗೌಡ ಹೇಳಿದರು.