ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ । ಚಿಕ್ಕಬಳ್ಳಾಪುರದಲ್ಲಿ ಸಭೆ
ದೇವನಹಳ್ಳಿ: ನಾನು ನಾಡಿನ ತಾಯಂದಿರಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ ಎರಡು ಸಾವಿರ ನೀಡಿ ಅವರ ಗಂಡಂದಿರ ಕೈಯಿಂದ 4000 ವಸೂಲಿ ಮಾಡುತ್ತಿದ್ದಾರೆ ಆದ್ದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮುರುಳಾಗಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.
ದೇವನಹಳ್ಳಿ ಪಟ್ಟಣದ ಕಾಲೇಜು ಮೈದಾನದಲ್ಲಿ “ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ -ಜೆಡಿಎಸ್ ಕಾರ್ಯಕರ್ತರ ಸಮಾವೇಶ”ದಲ್ಲಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮಾಗಮದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ಗಾಳಿ ಬೀಸುತ್ತಿದೆ ಹಾಗೂ ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ಮೊತ್ತವನ್ನು ಗ್ಯಾರಂಟಿಗೆ ಬಳಸಲಾಗಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡದೆ ದೆಹಲಿಗೆ ಕಳುಹಿಸಲಾಗಿದೆ. ದಲಿತರ ಬಗ್ಗೆ ಕಾಂಗ್ರೆಸ್ಗೆ ಗೌರವ ಇದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಬೇಕಿತ್ತು. ಡಾ.ಬಿ.ಆರ್.ಅಂಬೇಡ್ಕರ್ರ ಹೆಸರು ಹೇಳಲು ಕಾಂಗ್ರೆಸ್ ಯೋಗ್ಯತೆ ಮತ್ತು ನೈತಿಕತೆ ಇಲ್ಲ. ಬಾಬಾ ಸಾಹೇಬರನ್ನು ಎರಡು ಬಾರಿ ಸೋಲಿಸಿದ್ದೇ ಕಾಂಗ್ರೆಸ್ ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಇರುವವರೆಗೂ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲೇ ಉಳಿಯಲಿದೆ. ಬಿಜೆಪಿ ಯಾವಾಗಲೂ ಆಡಳಿತದ ಸ್ಥಾನದಲ್ಲಿದ್ದು ಜನ ಕಲ್ಯಾಣ ಕಾರ್ಯಗಳನ್ನು ಮಾಡಲಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀರಾವರಿಗೆ ಕೊಟ್ಟಷ್ಟು ಕೊಡುಗೆಗಳನ್ನು ಯಾರೂ ಕೊಟ್ಟಿಲ್ಲ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಕೆಟ್ಟದಾಗಿ ಹೇಳಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ಅದರೆ ಮಹಿಳೆಯರಿಗಾಗಿಯೇ ಕುಮಾರಸ್ವಾಮಿ ಸಾರಾಯಿ ನಿಷೇಧ ಮಾಡಿದ್ದರು. ರೈತರ ಸಾಲ ಮನ್ನಾ ಮಾಡಿದ್ದರು. ಕಾಂಗ್ರೆಸ್ಗೆ ಹೇಳಲು ಸಾಧನೆಗಳ ಸರಕು ಇಲ್ಲದೆ ಈ ರೀತಿಯ ತಂತ್ರ ಹೆಣೆಯುತ್ತಿದೆ ಎಂದರು.
ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ ರೈತ ನಾಯಕರಾಗಿರುವ ಕುಮಾರಣ್ಣನವರು ಹೆಣ್ಣು ಮಕ್ಕಳ ಕಾಳಜಿ ರಕ್ಷಣೆಯ ಉದ್ದೇಶದಿಂದಲೇ ಸಾರಾಯಿ ಮತ್ತು ಒಂದಂಕಿ ಲಾಟರಿಗಳನ್ನು ನಿಷೇಧ ಮಾಡಿದ್ದರು ಇಂಥವರ ಕುರಿತು ಕಾಂಗ್ರೆಸ್ ಪಕ್ಷ ಅಪಪ್ರಚಾರ ಮಾಡುತ್ತಿರುವುದು ವಿಪರ್ಯಸದ ಸಂಗತಿ ಎಂದರು.
ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ಸುಧಾಕರ್ ಪರ ಕುಮಾರಸ್ವಾಮಿಯವರು ಮತಯಾಚನೆ ಮಾಡುತ್ತಿರುವುದು ರೈತರ ಕಾಳಜಿ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ವಿಶ್ವಾಸದಿಂದ ನುಡಿದರು.
ಮಾಜಿ ಶಾಸಕ ಜಿ.ಚಂದ್ರಣ್ಣ, ಜಿಲ್ಲಾಧ್ಯಕ್ಷ ರಾಮಕೃಷ್ಣ,ಬಿ.ಮುನೇಗೌಡ,ತಾಲೂಕು ಅಧ್ಯಕ್ಷರಾದ ಆರ್. ಮುನೇಗೌಡ , ಸುಂದರೇಶ್, ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ ರವೀಂದ್ರ, ನಿಲೇರಿ ಮಂಜುನಾಥ್, ಮುಖಂಡರುಗಳಾದ ಓಬದೇನಹಳ್ಳಿ ಮುನಿಯಪ್ಪ , ಎಸ್ಎಲ್ಎನ್ ನಾರಾಯಣಸ್ವಾಮಿ , ಶ್ರೀನಿವಾಸ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತ್ತಿತರರು ಇದ್ದರು.
16ಡಿಎಚ್ಎಲ್ ಪಿ-೧
ದೇವನಹಳ್ಳಿ ಪಟ್ಟಣದ ಕಾಲೇಜು ಮೈದಾನದಲ್ಲಿ “ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ -ಜೆಡಿಎಸ್ ಕಾರ್ಯಕರ್ತರ ಸಮಾವೇಶ”ದಲ್ಲಿ ಕುಮಾರಸ್ವಾಮಿ ಮಾತನಾಡಿದರು.