ಪ್ರತಿನಿಧಿ ವರದಿ ಸರಗೂರು
ಬಿಜೆಪಿ ರಾಜ್ಯಾಧ್ಯಕ್ಷ ಬಿ .ವೈ ವಿಜಯೇಂದ್ರ ಅವರು ಪಟ್ಟಣದಲ್ಲಿ ಭರ್ಜರಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಬಾಲರಾಜು ಪರವಾಗಿ ಮತಯಾಚಿಸಿದರು.
ಈ ವೇಳೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಂತರ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿ ಜನ ಜಾನುವಾರುಗಳಿಗೂ ಕುಡಿಯುವ ನೀರಿನ ಬವಣೆ ಎದುರಾಗಿದೆ. 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿ ಒಂದು ಕೆಜಿ ಅಕ್ಕಿಯನ್ನೂ ನೀಡಲು ಸಾಧ್ಯವಾಗಿಲ್ಲ. ವಿದ್ಯುತ್ ಉಚಿತವಾಗಿ ನೀಡಿ ಅಂಗಡಿ ಮಳಿಗೆಗಳಿಗೆ
ಹೆಚ್ಚು ದರ ಮಾಡಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಲಜೀವನ್ ಮಿಷನ್ ಅಡಿಯಲ್ಲಿ ಪ್ರತಿ ಮನೆಗೂ ನೀರು ಒದಗಿಸಿದೆ. ಕಾಂಗ್ರೆಸ್ ಸರ್ಕಾರದಿಂದ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ? ನಯಾ ಪೈಸೆ ಬಿಡುಗಡೆಯಾಗಿದೆಯಾ? ಫಲಿತಾಂಶ ಬಂದ ನಂತರ ಅವರು ಚೊಂಬು ಹಿಡಿದುಕೊಂಡು ಹೋಗುವ ಸ್ಥಿತಿ ಬರುತ್ತದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.
ಮೋದಿ ನಾಯಕತ್ವದ ಹತ್ತು ವರ್ಷದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಬಾಲರಾಜು ಅವರಿಗೆ ಮತ ನೀಡಿ ಗೆಲುವಿಗೆ ಸಹಕರಿಸಿ ಎಂದು ಅವರು ಮನವಿ ಮಾಡಿದರು.
ಪಟ್ಟಣದ ಸಂತೆ ಮಾಸ್ತಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ದೇವಸ್ಥಾನದಿಂದ ಹೊರಟ ರೋಡ್ ಶೋ, ಬಸವೇಶ್ವರ ದೇವಸ್ಥಾನ, ಚಿಕ್ಕದೇವನ ವೃತ್ತ, ಮಹಾವೀರ ವೃತ್ತದ ಮೂಲಕ ಪ್ರವಾಸಿ ಮಂದಿರದಲ್ಲಿ ಕೊನೆಗೊಂಡಿತು.
ಅಭ್ಯರ್ಥಿ ಬಾಲರಾಜು ಮಾತನಾಡಿದರು. ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ಬಿಜೆಪಿ ಮುಖಂಡರು ಕೃಷ್ಣ ನಾಯಕ್, ಜೆಡಿಎಸ್ ಮುಖಂಡ ಜಯಪ್ರಕಾಶ್, ಸರಗೂರು ಬಿಜೆಪಿ ಘಟಕದ ಅಧ್ಯಕ್ಷ ಕಂದಲಿಕ್ಕೆ ಗುರುಸ್ವಾಮಿ, ಕೋಟೆ ಘಟಕದ ಶಂಭೇಗೌಡ, ಸಿ.ಕೆ. ಗಿರೀಶ್, ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾರಾಮು, ಜೆಡಿಎಸ್ ತಾಲೂಕ್ ಅಧ್ಯಕ್ಷ ಗೋಪಾಲಸ್ವಾಮಿ, ಎಂ.ರಾಜೇಂದ್ರ, ರುದ್ರಣ್ಣ ಮೊತ್ತ ಬಸವರಾಜ್, ಸಿ .ವಿ. ನಾಗರಾಜ್ ಮಳಲಿ ಶಾಂತಕುಮಾರ್, ಸುರೇಂದ್ರ, ಮಹಿಳಾಮೊರ್ಚ ಸುನಂದರಾಜ್, ಮಂಜುಳಾ, ಸೇರಿದಂತೆ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಇದ್ದರು.
ರೋಡ್ ಶೋ ವೇಳೆ ಬಿಜೆಪಿಗೆ ಜೈ
ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಸೇಬಿನ ಹಾರ ಹಾಕಿ ಸಂಭ್ರಮಿಸಿದರು.