ಹಾಸನ: ಮತದಾನ ಪ್ರಕ್ರಿಯೆ ಮುಗಿಯುವ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕೆ.ಬಿ.ಪಾಳ್ಯದಲ್ಲಿ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಅದರಂತೆ ಏ.26 ಹೊಳೆನರಸೀಪುರ ತಾಲೂಕಿನ ಮತಗಟ್ಟೆ ಸಂಖ್ಯೆ 249 ಕ್ಕೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ತಾಯಿ ಭೇಟಿ ನೀಡಿದ್ದರು. ಈ ವೇಳೆ ಜೆಡಿಎಸ್ ಕಾರ್ಯಕರ್ತರು ಸ್ವ ಪಕ್ಷಕ್ಕೆ ಜೈಕಾರ ಕೂಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಕೈ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಪರ ಘೋಷಣೆ ಕೂಗಿದ್ದಾರೆ.
ಇನ್ನು ಈ ಘೋಷಣೆ ವಿಕೋಪಕ್ಕೆ ತಿರುಗಿ ಎರಡು ಪಕ್ಷದವರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಕಬ್ಬಿಣದ ರಾಡ್ನಿಂದ ಜೆಡಿಎಸ್ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಇದರಲ್ಲಿ ಮೋಹನ್ಕುಮಾರ್, ಗಿರೀಶ್ ಮಂಜುನಾಥ್ ಎಂಬುವವರಿಗೆ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತ ಮೋಹನ್ಕುಮಾರ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಆಸ್ಪತ್ರೆಗೆ ಮೈಸೂರು ದಕ್ಷಿಣ ವಲಯ ಡಿಐಜಿ ಬೇಟಿ
ಇನ್ನು ಇಬ್ಬರು ಪರಸ್ಪರ ಹಲ್ಲೆ ಆರೋಪ ಮಾಡಿಕೊಂಡಿದ್ದಾರೆ. ಇತ್ತ ಜೆಡಿಎಸ್ನ ಸಾಗರ್ ಹಾಗೂ ಪ್ರದೀಪ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದರೆ, ಕೈ ಕಾರ್ಯಕರ್ತರಾದ ಪ್ರದೀಪ್, ಸಾಗರ್ ಹಾಗೂ ಗೌತಮ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತ ಜೆಡಿಎಸ್ ಕಾರ್ಯಕರ್ತರನ್ನೂ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಮೈಸೂರು ದಕ್ಷಿಣ ವಲಯ ಡಿಐಜಿ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಭೇಟಿ ನಿಡಿ, ಗಾಯಾಳುಗಳಿಂದ ಮಾಹಿತಿ ಪಡೆದಿದ್ದಾರೆ.