- ನಗರದಲ್ಲಿ ಮಳೆಯ ನಡುವೆಯೂ ರೈತ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪ್ರತಿಭಟನೆ
ಪ್ರತಿನಿಧಿ ವರದಿ ಚಾಮರಾಜನಗರ
ಇತ್ತೀಚೆಗೆ ಸುರಿದ ಗಾಳಿ ಸಹಿತ ಬಾರಿ ಮಳೆಗೆ ಬಾಳೆ ಬೆಳೆ ನಾಶಗೊಂಡು, ಸಂಕಷ್ಟಕ್ಕೆ ಸಿಲುಕಿರುವ ಬಾಳೆ ಬೆಳೆಗಾರರನ್ನು ಸಂಕಷ್ಟದಿಂದ ಪಾರುಮಾಡಲು ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆಗೆ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಮಳೆಯ ನಡುವೆಯೂ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಹೊರ ವಲಯ ಸೋಮವಾರಪೇಟೆ ಬಳಿ ಹಾದು ಹೋಗಿರುವ ಬೆಂಗಳೂರು-ದಿಂಡಗಲ್ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಸುರಿಯುತ್ತಿದ್ದ ಮಳೆಯನ್ನು ಲೆಕ್ಕಿಸದೇ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ,ಇತ್ತೀಚೆಗೆ ಸುರಿದ ಗಾಳಿ ಸಹಿತ ಬಾರಿ ಮಳೆಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಸುಮಾರು ಒಂದುವರೆ ಲಕ್ಷ ಹೆಕ್ಟರ್ ಪ್ರದೇಶದ ಬಾಳೆ ನಾಶವಾಗಿದ್ದು, ಬಾಳೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಆದರೆ ಶಾಸಕರುಗಳಾಗಲಿ ಅಥವಾ ಸಚಿವರಾಗಲಿ ಇದರ ಬಗ್ಗೆ ಮಾತನಾಡು ತ್ತಿಲ್ಲ. ಸರ್ಕಾರ ಈ ಕೂಡಲೇ ಸಂಕಷ್ಟಕ್ಕೆ ಸಿಲುಕಿರುವ ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಬರಗಾಲದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ವೈಜ್ಞಾನಿಕವಾಗಿ ಬೆಳೆ ನಷ್ಟವನ್ನು ತುಂಬಿಕೊಡಬೇಕು ಎಂದು ಆಗ್ರಹಿಸಿದ್ದೇವೆ. ಆದರೆ ಸರ್ಕಾರ ಷರತ್ತುಗಳನ್ನು ವಿಧಿಸಿ ರೈತರಿಗೆ ಪರಿಹಾರ ನೀಡುವಲ್ಲಿ ಮೋಸ ಮಾಡುತ್ತಿದೆ.
ಸರ್ಕಾರ ಅಕ್ರಮ-ಸಕ್ರಮ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕು. ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿ ಲೀಟರ್ ಹಾಲಿಗೆ 10 ರೂ.ಪ್ರೋತ್ಸಾಹ ಧನವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಯಾವುದೇ ಕಾನೂನುಗಳನ್ನು ಜಾರಿ ಮಾಡಿದರೂ ಅದು ರೈತರ ಪರವಾಗಿರಬೇಕು. ಬ್ಯಾಂಕ್ ಗಳಲ್ಲಿ ರೈತರಿಗೆ ಸಿಬಿಲ್ ಸ್ಕೋರ್ ಗಳನ್ನು ಕೇಳಲಾಗುತ್ತಿದೆ. ಇದರಿಂದ ರೈತರಿಗೆ ಯಾವುದೇ ಸಾಲ ಸೌಲಭ್ಯ ದೊರೆಯುತ್ತಿಲ್ಲ. ಸರ್ಕಾರವು ರೈತರ ಬಗ್ಗೆ ಗಮನ ಹರಿಸಿ, ಬೆಳೆ ನಷ್ಟಕ್ಕೆ ಸಿಲುಕಿರುವ ರೈತರಿಗೆ ವೈಜ್ಞಾನಿಕ ಬೆಳೆ ಪರಿಹಾರವನ್ನು ನೀಡಬೇಕು. ಇಲ್ಲದಿದ್ದರೆ ಜಿಲ್ಲೆಗೆ ಬರುವ ಜನಪ್ರತಿನಿಧಿಗಳು, ಸಚಿವರು ಹಾಗೂ ಇತರೆ ಅಧಿಕಾರಿಗಳನ್ನು ತಡೆದು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ರಾಜ್ಯ ಪ್ರಧಾನ ಕಾರ್ಯ ದರ್ಶಿ ಮಲಿಯೂರು ಹರ್ಷ, ರವಿ ಹರಳಿಕಟ್ಟೆ, ಕುಮಾರ್ ಉಡಿಗಾಲ, ಮಂಜುನಾಥ್, ಗುರುಮಲ್ಲಪ್ಪ, ಮಹದೇವಸ್ವಾಮಿ, ಚೇರ್ಮನ್ ಗುರು, ಮಾದೇಶ್, ಜಗ, ರಾಜು,ಸೂರ್ಯ ಮಲೆಯೂರು ಬಸವರಾಜಪ್ಪ, ಮಹೇಂದ್ರ, ಸತೀಶ್,ಪ್ರಭುಸ್ವಾಮಿ, ಸಿದ್ದಲಿಂಗಪ್ಪ, ಸಿದ್ದಪ್ಪ, ಮಹೇಶ, ಚಿಕ್ಕಸ್ವಾಮಿ, ಅಂಬಳೆ ಮಂಜುನಾಥ್ ಸೇರಿದಂತೆ ಇತರರು ಇದ್ದರು.
11ಸಿಎಚ್ಎನ್.1:ಬಾಳೆ ಬೆಳೆಗಾರರನ್ನು ಸಂಕಷ್ಟದಿಂದ ಪಾರುಮಾಡಲು ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆಗೆ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದರು.